ಐವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ Saaksha Tv
ಜಮ್ಮು ಕಾಶ್ಮೀರ: ಕಣಿವೆ ರಾಜ್ಯದಲ್ಲಿ ಭದ್ರತಾ ಪಡೆಗಳು ಪ್ರತ್ಯೆಕವಾಗಿ ನಡೆಸಿದ ಎನಕೌಂಟರ್ ನಲ್ಲಿ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಎಂದು ಜಮ್ಮು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮತ್ತು ಬದ್ಗಾಮ್ ಜಿಲ್ಲೆಗಳಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೋಯ್ಬಾ ಮತ್ತು ಜೈಷ್-ಎ-ಮೊಹಮದ್ನೊಂದಿಗೆ ಸಂಬಂಧ ಹೊಂದಿದ್ದ ಜೈಶ್-ಎ-ಮೊಹಮ್ಮದ್ ಕಮಾಂಡರ್ ಜಾಹಿದ್ ವಾನಿ ಸೇರಿದಂತೆ ಐವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಭಾನುವಾರ ಸ್ಪಷ್ಟಪಡಿಸಿದ್ದಾರೆ.
ಎನ್ಕೌಂಟರ್ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವಾರು ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
12 ಗಂಟೆಗಳ ಕಾರ್ಯಾಚರಣೆಯಲ್ಲಿ ಪುಲ್ವಾಮಾ ಜಿಲ್ಲೆಯ ನೈರಾ ಪ್ರದೇಶದಲ್ಲಿ ನಾಲ್ವರು ಭಯೋತ್ಪಾದಕರು ಮತ್ತು ಬದ್ಗಾಮ್ನ ಚ್ರಾರ್-ಇ-ಶರೀಫ್ ಪ್ರದೇಶದಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ. ಇದು ಭದ್ರತಾಪಡೆಗಳಿಗೆ ಸಿಕ್ಕ ಬಹುದೊಡ್ಡ ಯಶಸ್ಸು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.