ಹಿಜಾಬ್ ಧರಿಸದೆ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯರು
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು, ವಿದ್ಯಾರ್ಥಿನಿಯರು ಹಿಜಾಬ್ ಧರಿಸದೆ ಪರೀಕ್ಷೆಗೆ ಹಾಜರಾಗಿದ್ದಾರೆ.
ರಾಜ್ಯದ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥನಿಯರು ಹಿಜಾಬ್ ಹಾಗೂ ಬುರ್ಕಾ ಧರಿಸದೆ ಪರೀಕ್ಷೆ ಬರೆಯುತ್ತಿದ್ದು, ಈ ಮೂಲಕ ಮೊದಲನೇ ದಿನದ ಪರೀಕ್ಷೆ ಸುಭಿಕ್ಷವಾಗಿ ಜರಗುತ್ತಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜುವರೆಗೂ ಹಿಜಾಬ್ ಹಾಗೂ ಬುರ್ಕಾ ಧರಿಸಿ ಬಂದಿದ್ದರು. ಕಾಲೇಜಿನಲ್ಲಿ ಹಿಜಾಬ್ ಮತ್ತು ಬುರ್ಕಾ ತೆಗೆದಿಡಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, ಹಿಜಾಬ್ ಹಾಗೂ ಬೂರ್ಕಾ ತೆಗೆದು ಪರೀಕ್ಷೆಗೆ ಹಾಜರಾಗಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿಯೇ ವಿದ್ಯಾರ್ಥಿನಿಯರು ಬಂದಿದ್ದಾರೆ. ಆದರೆ, ಪರೀಕ್ಷಾ ಕೊಠಡಿಗೆ ಹಿಜಾಬ್ ತೆಗೆದಿರಿಸಿ ತೆರಳಿದ್ದಾರೆ.
ಬಳ್ಳಾರಿಯಲ್ಲಿ ಬಳ್ಳಾರಿಯಲ್ಲಿ 16 ಪರೀಕ್ಷಾ ಕೇಂದ್ರಗಳು ಹಾಗೂ ವಿಜಯನಗರ ಜಿಲ್ಲೆಯಲ್ಲಿ 18 ಕೇಂದ್ರಗಳನ್ನು ತೆರೆಯಲಾಗಿದೆ. ಈ ಪರೀಕ್ಷಾ ಕೇಂದ್ರಗಳಲ್ಲಿ ಹಿಜಾಬ್ ಮತ್ತು ಬೂರ್ಕಾ ಧರಿಸಿಕೊಂಡು ಬಂದ ವಿದ್ಯಾರ್ಥನಿಯರು, ಪರೀಕ್ಷಾ ಕೊಠಡಿಗೆ ಹಿಜಾಬ್ ಮತ್ತು ಬೂರ್ಕಾ ತೆಗೆದಿರಿಸಿ ತೆರಳಿದ್ದಾರೆ.
ಇನ್ನೂ ಮಂಗಳೂರಿನ ರಥಬೀದಿಯ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಹಿಜಾಬ್ ಧರಿಸಿ ಮೂವರು ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಆಗಮಿಸಿದ್ದರು. ಆದರೆ, ಪೊಲೀಸರು ಅವರನ್ನು ಪ್ರವೇಶ ದ್ವಾರದ ಬಳಿಯೇ ತಡೆದು ಹಿಜಾಬ್ ತೆಗೆದು ಬರುವಂತೆ ಸೂಚಿಸಿದ್ದಾರೆ. ಅದರಂತೆ ಹಿಜಾಬ್ ಅನ್ನು ತೆಗೆದಿಟ್ಟು ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿನಿಯರು ಪ್ರವೇಶಿಸಿದ್ದಾರೆ. ಜಿಲ್ಲೆಯಲ್ಲಿ ಎಲ್ಲೂ ಗೊಂದಲದ ವಾತಾವರಣ ಸೃಷ್ಟಿಯಾಗಿಲ್ಲ.
ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಬಂದಿದ್ದರು. ಆಗ ಪರೀಕ್ಷಾ ಕೇಂದ್ರದ ಸಿಬ್ಬಂದಿ ಮತ್ತು ಪೊಲೀಸರು ಹಿಜಾಬ್ ಮತ್ತು ಬುರ್ಕಾ ತೆಗೆದು ಪರೀಕ್ಷಾ ಕೊಠಡಿಗೆ ಹಾಜರಾಗಿ ಎಂದು ಮನವೊಲಿಸಲು ಯತ್ನಿಸಿದರು. ಆದರೆ ವಿದ್ಯಾರ್ಥಿನಿಯರು ಇದಕ್ಕೆ ಒಪ್ಪದಿದ್ದಾಗ, ವಿದ್ಯಾರ್ಥನಿಯರನ್ನು ವಾಪಸ್ ಕಳುಹಸಿಸಲಾಯಿತು.
ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ. ಮೇ 18ರವರೆಗೂ ನಿಷೇಧಾಜ್ಞೆ ಮುಂದುವರಿಯಲಿದೆ.