ಹಾವೇರಿ: ವಿಜಯದಶಮಿ (Vijayadashami) ಹಬ್ಬದಂದು ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಆದರೆ, ಇಲ್ಲೊಬ್ಬ ಯುವಕ ಈಜಲು ಹೋಗಿ ನೀರುಪಾಲಾಗಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಜಿಲ್ಲೆಯ ಸವಣೂರು ತಾಲ್ಲೂಕಿನ ಕಳಸೂರು ಗ್ರಾಮದಲ್ಲಿ ನಡೆದಿದೆ. ಇಲ್ಲಿಯ ವರದಾ ನದಿಯಲ್ಲಿ ಈಜಲು ತೆರಳಿದ್ದ 17 ವರ್ಷದ ಯುವಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಮೃತ ಬಾಲಕನನ್ನು ಅಮೋಘ್ ಹೊಸಮನಿ (17) ಎಂದು ಗುರುತಿಸಲಾಗಿದೆ. ಅಮೋಘ್ ಸ್ನೇಹಿತರೊಂದಿಗೆ ವರದಾ ನದಿಗೆ ಸ್ನಾನಕ್ಕೆಂದು ತೆರಳಿದ್ದ. ಈ ವೇಳೆ ನೀರಲ್ಲಿ ಮುಳುಗಿ ಈಜು ಬಾರದೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ನದಿಯಿಂದ ಹೊರ ತೆಗೆದಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಕುರಿತು ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.