ಎಸ್.ಟಿ.ಸೋಮಶೇಖರ್ ಭ್ರಷ್ಟಾಚಾರದಿಂದಾಗಿ ಅಭಿವೃದ್ಧಿಯಾಗದ ಯಶವಂತಪುರʼ AAM ADMI Party saaksha tv
ಶಾಸಕ ಎಸ್.ಟಿ.ಸೋಮಶೇಖರ್ರವರು ಕಳೆದ ಎಂಟು ವರ್ಷಗಳಲ್ಲಿ ಸಾವಿರಾರು ಕೋಟಿ ಅನುದಾನವನ್ನು ಯಶವಂತಪುರ ಕ್ಷೇತ್ರಕ್ಕೆ ತಂದರೂ ಕ್ಷೇತ್ರ ಅಭಿವೃದ್ಧಿಯಾಗದಿರುವುದಕ್ಕೆ ಅವರು ಮಾಡಿರುವ 40% ಭ್ರಷ್ಟಾಚಾರವೇ ಕಾರಣ ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಹೇಳಿದರು.
ಗುತ್ತಿಗೆ ಕಾಮಗಾರಿಗಳಲ್ಲಿನ ಭ್ರಷ್ಟಾಚಾರ ಖಂಡಿಸಿ ಆಮ್ ಆದ್ಮಿ ಪಾರ್ಟಿಯು ಬೆಂಗಳೂರಿನಾದ್ಯಂತ ನಡೆಸುತ್ತಿರುವ ಹತ್ತು ದಿನಗಳ ಸಹಿ ಸಂಗ್ರಹ ಅಭಿಯಾನದ ಭಾಗವಾಗಿ, ಯಶವಂತಪುರ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳಲ್ಲಿ ಸಹಿ ಸಂಗ್ರಹಿಸಿ ಮೋಹನ್ ದಾಸರಿ ಮಾತನಾಡಿದರು.
“ಯಶವಂತಪುರ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಬಹುತೇಕ ರಸ್ತೆಗಳಲ್ಲಿ ಯಮಸ್ವರೂಪಿ ಗುಂಡಿಗಳಿವೆ. ಸರ್ಕಾರದ ಅನುದಾನವನ್ನು ತಮ್ಮ ಜೇಬಿಗೆ ಹಾಕಿಕೊಂಡು ಶಾಸಕರು ಅಭಿವೃದ್ಧಿಯಾಗಿದ್ದಾರೆ. ತೆರಿಗೆ ಕಟ್ಟಿದ ಸಾಮಾನ್ಯ ಜನರು ಜೀವಭಯದಲ್ಲಿ ವಾಹನ ಚಾಲನೆ ಮಾಡಬೇಕಾಗಿದೆ. ಸಹಿ ಸಂಗ್ರಹಿಸಲು ಕ್ಷೇತ್ರದಲ್ಲಿ ಸಂಚಾರ ಮಾಡುತ್ತಿರುವಾಗ ಜನರು ಶಾಸಕರಿಗೆ ಹಿಡಿಶಾಪ ಹಾಕುತ್ತಿರುವುದು ಕೇಳಿಸುತ್ತಿದೆ” ಎಂದು ಮೋಹನ್ ದಾಸರಿ ಹೇಳಿದರು.
ಯಶವಂತಪುರ ವಿಧಾನಸಭಾ ಕ್ಷೇತ್ರದ ಎಎಪಿ ಅಧ್ಯಕ್ಷ ಡಾ. ಸತೀಶ್ ಕುಮಾರ್ ಮಾತನಾಡಿ, “ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ಅಕ್ರಮವನ್ನು ಬಿಚ್ಚಿಟ್ಟಿದ್ದರೂ ಸೂಕ್ತ ತನಿಖೆಗೆ ಆದೇಶಿಸಿಲ್ಲ. ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗದ ಹೊರತು ಆರೋಪಿಗಳಿಗೆ ಸೂಕ್ತ ಶಿಕ್ಷೆ ಆಗುವುದಿಲ್ಲ” ಎಂದು ಹೇಳಿದರು.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಎಎಪಿ ಅಧ್ಯಕ್ಷ ಸತೀಶ್ ಗೌಡ ಮಾತನಾಡಿ, “ತೆರಿಗೆ ಕಟ್ಟುವ ಜನರಿಗೆ ಸರಿಯಾದ ರಸ್ತೆಗಳನ್ನು ಪಡೆಯುವ ಸಂಪೂರ್ಣ ಹಕ್ಕು ಇದೆ. ಇವುಗಳನ್ನು ಪಡೆಯುವುದಕ್ಕಾಗಿಯೇ ಜನರು ವಾಹನ ತೆರಿಗೆ, ರಸ್ತೆ ತೆರಿಗೆ, ಆಸ್ತಿ ತೆರಿಗೆ, ಜಿಎಸ್ಟಿ ಮುಂತಾದವುಗಳನ್ನು ಕಟ್ಟಿರುತ್ತಾರೆ. ರಸ್ತೆ ದುರಸ್ತಿಗಾಗಿ ಸರ್ಕಾರದ ಬೊಕ್ಕಸದಿಂದ 20 ಸಾವಿರ ಕೋಟಿ ರೂಪಾಯಿ ಖರ್ಚಾಗಿದ್ದರೂ ಗುಂಡಿಗಳು ಕಡಿಮೆಯಾಗಲಿಲ್ಲ. ದುಡ್ಡು ಕೊಳ್ಳೆ ಹೊಡೆಯುವುದಕ್ಕಾಗಿ ಕಡಿಮೆ ಗುಣಮಟ್ಟದ ವಸ್ತುಗಳನ್ನು ಬಳಸಿ, ಕೇವಲ ಒಂದು ತಿಂಗಳೊಳಗೆ ಕಿತ್ತುಹೋಗುವಷ್ಟು ಕಳಪೆ ಕಾಮಗಾರಿ ಮಾಡಲಾಗಿದೆ” ಎಂದರು.
ಬೆಂಗಳೂರು ನಗರ ಎಎಪಿ ಉಪಾಧ್ಯಕ್ಷರಾದ ಬಿ.ಟಿ.ನಾಗಣ್ಣ, ಪಕ್ಷದ ಮುಖಂಡರಾದ ಸುರೇಶ್ ರಾಥೋಡ್, ಶಶಿಧರ್ , ಸುಹಾಸಿನಿ, ಚನ್ನಕೇಶವ, ಮಂಜುನಾಥ ಹಾಗೂ ಇನ್ನಿತರ ಸ್ಥಳೀಯ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.









