ಬೆಂಗಳೂರು : ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಿದೆ.
ಧರ್ಮದ ಆಧಾರದ ಮೇಲೆ ಮತ ಯಾಚನೆ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗ ದೂರು ದಾಖಲಿಸಿದೆ. ಜನ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 123(3)ರ ಅಡಿ ಪ್ರಕರಣ ದಾಖಲಾಗಿದೆ. ಸಂಸದ ತೇಜಸ್ವಿ ಸೂರ್ಯ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಜಯನಗರ ಠಾಣೆಯಲ್ಲಿ ಸೆಕ್ಷನ್ 123(3) ಅಡಿ ಪ್ರಕರಣ ದಾಖಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಹೇಳಿದ್ದಾರೆ.
ಚುನಾವಣೆಗೂ ಒಂದು ದಿನ ಮೊದಲು ಎಕ್ಸ್ನಲ್ಲಿ ಅಯೋಧ್ಯೆಯ (Ayodhya) ಬಾಲ ರಾಮನ ಹಣೆಗೆ ಸೂರ್ಯ ಸ್ಪರ್ಶಿಸುವ ವಿಡಿಯೋವನ್ನು ಅಪ್ಲೋಡ್ ಮಾಡಿ, ರಾಮ ನವಮಿಯಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಮೇಲೆ ಭವ್ಯವಾದ ಸೂರ್ಯ ತಿಲಕ ವೀಕ್ಷಿಸಲು ನಮ್ಮ ಪೀಳಿಗೆಯು ಆಶೀರ್ವದಿಸಲ್ಪಟ್ಟಿದೆ. ಸುಮಾರು 500 ವರ್ಷಗಳ ಕಾಯುವಿಕೆ ಮತ್ತು ಕೋಟಿಗಟ್ಟಲೆ ಭಾರತೀಯರ ಆಶಯವನ್ನು ಪ್ರಧಾನಿ ಈಡೇರಿಸಿದ್ದಾರೆ. ಭಾರತೀಯತೆ ಉಳಿಯಲು ಬಿಜೆಪಿಗೆ ಮತ ನೀಡಿ ಎಂದು ಬರೆದು ಮನವಿ ಮಾಡಿದ್ದರು. ಹೀಗಾಗಿ ಅವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.