ಖ್ಯಾತ ನಟ, ಕನ್ನಡದಲ್ಲಿಯೇ ಪರೀಕ್ಷೆ ಬರೆದು ಯಶಸ್ವಿಯಾದ ಮೊದಲ ವ್ಯಕ್ತಿ ಕೆ. ಶಿವರಾಮ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ನಿನ್ನೆಯಷ್ಟೇ ಅವರಿಗೆ ಹೃದಯಾಘಾತವಾಗಿರುವ ಸುದ್ದಿ ಹೊರ ಬಿದ್ದಿತ್ತು. ಜೊತೆಗೆ ಮೆದುಳು ನಿಷ್ಕ್ರೀಯಗೊಂಡಿತ್ತು ಎನ್ನಲಾಗಿದೆ. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಶಿವರಾಮ್ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು ಎಂದು ಅಳಿಯ ಪ್ರದೀಪ್ ಅವರು ನಿನ್ನೆಯಷ್ಟೇ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದರು. ಅವರ ಆರೋಗ್ಯ ಚಿಂತಾಜನಕವಾಗಿದೆ. ಎಲ್ಲರೂ ದೇವರಲ್ಲಿ ಪ್ರಾರ್ಥಿಸಿ ಎಂದು ಮನವಿ ಮಾಡಿಕೊಂಡಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕನ್ನಡದಲ್ಲೇ ಐಎಎಸ್ ಬರೆದಿದ್ದ ಅವರು ಅಧಿಕಾರ ವಹಿಸಿಕೊಂಡ ನಂತರ ಬೆಂಗಳೂರು, ವಿಜಯಪುರ, ಕೊಪ್ಪಳ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ನಂತರ ನಟರಾಗಿ ಬಾ ನಲ್ಲೆ ಮಧುಚಂದ್ರಕೆ, ವಸಂತ ಕಾವ್ಯದಂತಹ ಚಿತ್ರಗಳಲ್ಲಿ ನಟಿಸಿದ್ದಾರೆ.
ಶಿವರಾಮ್ 1953ರ ಏಪ್ರಿಲ್ 6ರಂದು ರಾಮನಗರ ಜಿಲ್ಲೆಯ ಉರಗಳ್ಳಿಯಲ್ಲಿ ಜನಿಸಿದ್ದರು. ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ತಮ್ಮ ಹಳ್ಳಿಯಲ್ಲಿ ಮುಗಿಸಿದ್ದರು. ನಂತರ ಬೆಂಗಳೂರಿನ ಮಲ್ಲೇಶ್ವರಂ ಸರ್ಕಾರಿ ಶಾಲೆಯಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದರು. ವಿವಿ ಪುರಂನ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಡಿಗ್ರಿ ಮುಗಿಸಿದ ಶಿವರಾಮ್, 1982ರಲ್ಲಿ ಮೈಸೂರು ಯುನಿವರ್ಸಿಟಿಯಿಂದ ಇತಿಹಾಸ ವಿಷಯದಲ್ಲಿ ಮಾಸ್ಟರ್ ಆಫ್ ಆಟ್ಸ್ ಪದವಿ ಪಡೆದರು. 1985ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದರು. ನಂತರ ಕನ್ನಡ ಭಾಷೆಯಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಭಾರತದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅಧಿಕಾರ ಸಿಕ್ಕ ನಂತರ ಪ್ರಾಮಾಣಿಕವಾಗಿ ಹಲವು ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸಿದರು.
ಆನಂತರ ಚಿತ್ರರಂಗಕ್ಕೆ ಕಾಲಿಟ್ಟು ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡರು. ವಸಂತಕಾವ್ಯ, ಸಾಂಗ್ಲಿಯಾನ ಪಾರ್ಟ್ 3, ಪ್ರತಿಭಟನೆ, ಖಳನಾಯಕ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್, ನಾಗ, ಓ ಪ್ರೇಮ ದೇವತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟೆಸಿದ್ದರು. ಸಿನಿಮಾ ರಂಗದೊಂದಿಗೆ ನಂತರ 2013ರಲ್ಲಿ ರಾಜಕೀಯ ಕೂಡ ಪ್ರವೇಶಿಸಿದರು.