ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ನಡುವೆಯೇ, ಇಬ್ಬರು ಕಾಂಗ್ರೆಸ್ ನಾಯಕರದ್ದು ಎನ್ನಲಾದ ಆಡಿಯೋ ಸಂಭಾಷಣೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಸುಮಾರು 5.34 ನಿಮಿಷಗಳ ಈ ವೈರಲ್ ಆಡಿಯೋದಲ್ಲಿ ಮಾಜಿ ಸಚಿವ ಆರ್.ಬಿ. ತಿಮ್ಮಾಪೂರ ಹಾಗೂ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅವರ ಧ್ವನಿಯಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಆಡಿಯೋದ ಸತ್ಯಾಸತ್ಯತೆ ಬಗ್ಗೆ ಕಾಂಗ್ರೆಸ್ ಪಕ್ಷವಾಗಲಿ ಅಥವಾ ಸಂಬಂಧಿತ ನಾಯಕರಾಗಲಿ ಇದುವರೆಗೆ ಅಧಿಕೃತವಾಗಿ ದೃಢಪಡಿಸಿಲ್ಲ ಅಥವಾ ಸ್ಪಷ್ಟನೆ ನೀಡಿಲ್ಲ.
ಆಡಿಯೋದಲ್ಲಿ ಸಚಿವ ಸ್ಥಾನ ನೀಡಲು ಹಣ ಪಡೆಯಲಾಗುತ್ತದೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹೈಕಮಾಂಡ್ ಕುರಿತು ಆರೋಪಗಳು ಕೇಳಿಬಂದಿವೆ. ಅಲ್ಲದೆ, ಪ್ರಾಮಾಣಿಕ ನಾಯಕರಿಗೆ ಸಚಿವ ಸ್ಥಾನ ಸಿಗುತ್ತಿಲ್ಲ ಎಂಬ ಹೇಳಿಕೆಗಳೂ ಇರುವುದಾಗಿ ಹೇಳಲಾಗುತ್ತಿದೆ.
ಆಡಿಯೋ ವೈರಲ್ ಆದ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದ್ದು, ಅದರ ಸತ್ಯಾಸತ್ಯತೆ ಹಾಗೂ ಆರೋಪಗಳ ಕುರಿತು ಅಧಿಕೃತ ಪ್ರತಿಕ್ರಿಯೆಗಾಗಿ ಕಾದು ನೋಡಲಾಗುತ್ತಿದೆ.








