ಬೆಂಗಳೂರು, ಮೇ 26 : ಪಾಕಿಸ್ತಾನ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಬಂಧನದಲ್ಲಿ ಇರುವ ಅಮೂಲ್ಯ ಲಿಯೋನ್ ಳ ಜಾಮೀನು ಅರ್ಜಿಯನ್ನು, ಲಿಯೋನ್ ಪರ ವಕೀಲರು ವಾಪಸ್ ಪಡೆದಿದ್ದಾರೆ. ಫೆಬ್ರವರಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯ ಸಮಯದಲ್ಲಿ ಅಮೂಲ್ಯ ಲಿಯೋನ್ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತಳಾಗಿದ್ದು, ಕರ್ನಾಟಕ ಹೈಕೋರ್ಟ್ಗೆ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಳು. ಇದೀಗ ಜಾಮೀನು ಅರ್ಜಿಯನ್ನು ಲಿಯೋನ್ ಪರ ವಕೀಲರು ವಾಪಸು ಪಡೆದುಕೊಂಡಿದ್ದಾರೆ.
ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಅಮೂಲ್ಯ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಬಂದಿತ್ತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಅರ್ಜಿ ವಾಪಸ್ ಪಡೆಯಲು ಅನುಮತಿ ನೀಡುವಂತೆ ಕೋರಿದರು. ನ್ಯಾಯಪೀಠ ಅರ್ಜಿ ವಾಪಸ್ ಪಡೆಯಲು ಒಪ್ಪಿಗೆ ನೀಡಿ, ಅರ್ಜಿದಾರರಿಗೆ ಸೆಷನ್ಸ್ ನ್ಯಾಯಾಲಯದಲ್ಲಿ ಪರಿಹಾರ ಸಿಗದಿದ್ದ ಪಕ್ಷದಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿತು.
ಉಪ್ಪಾರಪೇಟೆ ಠಾಣೆ ಪೊಲೀಸರ ಪರವಾಗಿ ಸರ್ಕಾರಿ ಅಭಿಯೋಜಕರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದು, ದೇಶದ್ರೋಹದ ಆರೋಪದಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ನ್ಯಾಯಪೀಠ ಆರೋಪಿಗೆ ಜಾಮೀನು ನೀಡಬಾರದು ಎಂದು ವಾದಿಸಿದರು. ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನ್ ಪಾಲ್ಗೊಂಡಿದ್ದಳು. ವೇದಿಕೆ ಮೇಲಿದ್ದ ಅಮೂಲ್ಯ ಲಿಯೋನ್ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿ ಉಪ್ಪಾರಪೇಟೆ ಪೊಲೀಸರಿಂದ ಬಂಧಿಸಲ್ಪಟ್ಟಿದ್ದಳು. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿ ಇರುವ ಅಮೂಲ್ಯ ಲಿಯೋನ್ ಮೇಲೆ ದೇಶದ್ರೋಹದ ಆರೋಪದಡಿ ತನಿಖೆ ನಡೆಯುತ್ತಿದೆ.