ಇಡೀ ಭಾರತೀಯರಿಗೆ ಜ. 22 ಮರೆಯಲಾರದ ಕ್ಷಣ. ಕೋಟ್ಯಾಂತರ ಭಾರತೀಯರ ಮಹಾ ಕನಸು ಅಂದು ನನಸಾಗುತ್ತಿದೆ.
ರಾಮಮಂದಿರದಲ್ಲಿ ಬಾಲ ರಾಮನ ‘ಪ್ರಾಣ ಪ್ರತಿಷ್ಠಾ’ ಸಮಾರಂಭ (Ayodhya Ram Mandir inauguration) ವಿಜೃಂಭಣೆಯಿಂದ ನಡೆಯಲಿದ್ದು, ಗಣ್ಯರು ಅಯೋಧ್ಯೆಗೆ ಬಂದು ತಲುಪಿದ್ದಾರೆ. ಈ ಸಮಾರಂಭಕ್ಕೆ ಸಾವಿರಾರು ಗಣ್ಯರನ್ನು ಆಹ್ವಾನಿಸಲಾಗಿದೆ. ಭಾರತ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ, ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ (Venkatesh Prasad) ಕೂಡ ಅಯೋಧ್ಯೆಗೆ ತೆರಳಿದ್ದಾರೆ.
ಲಕ್ನೋ ವಿಮಾನ ನಿಲ್ದಾಣದಲ್ಲಿ ಕೆಲವು ಅರ್ಚಕರೊಂದಿಗೆ ಕಾಣಿಸಿಕೊಂಡ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಹಾಗೂ ಅವರ ಕುಟುಂಬ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ವೆಂಕಟೇಶ್ ಪ್ರಸಾದ್ ಕೂಡ ಈಗಾಗಲೇ ಅಯೋಧ್ಯೆ ತಲುಪಿರುವುದಾಗಿ ಹೇಳಿಕೊಂಡಿದ್ದಾರೆ.
ದಿಗ್ಗಜರಾದ ಎಂಎಸ್ ಧೋನಿ, ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್, ಕಪಿಲ್ ದೇವ್, ಆರ್ ಅಶ್ವಿನ್ ಮತ್ತು ಹರ್ಮನ್ಪ್ರೀತ್ ಕೌರ್ ಅವರನ್ನು ಕೂಡ ಈ ಸಮಾರಂಭಕ್ಕೆ ಆಹ್ವಾನಿಸಲಾಗಿದೆ ಎನ್ನಲಾಗಿದೆ.
ಈ ನಿಟ್ಟಿನಲ್ಲಿ ಅಯೋಧ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಭದ್ರತೆ ಕಲ್ಪಿಸಲಾಗಿದೆ. ಸುಮಾರು 13000 ಪಡೆಗಳನ್ನು ನಿಯೋಜಿಸಲಾಗಿದೆ.
ಪ್ರಾಣ ಪ್ರತಿಷ್ಠಾ ಸಮಾರಂಭವು ಮಧ್ಯಾಹ್ನ 12.20 ಕ್ಕೆ ಪ್ರಾರಂಭವಾಗಲಿದ್ದು, ಮಧ್ಯಾಹ್ನ 1ಕ್ಕೆ ಮುಕ್ತಾಯವಾಗಲಿದೆ. ನಂತರ ಪ್ರಧಾನಿ ನರೇಂದ್ರ ಮೋದಿ ಅವರು, ಗಣ್ಯ ಆಹ್ವಾನಿತರು ಸೇರಿದಂತೆ 6000 ಕ್ಕೂ ಹೆಚ್ಚು ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.








