ಕರಾವಳಿ ಪ್ರದೇಶದಲ್ಲಿ ಶಾಂತಿ ಕದಡುವವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಸಜ್ಜಾಗಿದೆ. ಸುಹಾಸ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಮಹತ್ವದ ಘೋಷಣೆ ಮಾಡಿದ್ದಾರೆ. ಯಾವುದೇ ಧರ್ಮ ಅಥವಾ ಸಮುದಾಯದವರಾದರೂ ಕೋಮುವಾದಿಗಳಿಗೆ ಕಾನೂನಿನಿಂದ ರಕ್ಷಣೆ ಇಲ್ಲ ಎಂದು ಎಚ್ಚರಿಕೆ ನೀಡಿದ ಅವರು, ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ವಿವಿಧ ವಿಷಯಗಳನ್ನು ಸ್ಪಷ್ಟಪಡಿಸಿದರು.
8 ಮಂದಿ ಆರೋಪಿಗಳು ಬಂಧನ:
ಸುಹಾಸ್ ಹತ್ಯೆ ಪ್ರಕರಣದಲ್ಲಿ ಈಗಾಗಲೇ 8 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಗಂಭೀರವಾಗಿ ನಡೆಯುತ್ತಿದೆ. ಯಾರೇ ಇದ್ದರೂ ಕಾನೂನು ಉಲ್ಲಂಘಿಸಿದರೆ, ಹಿನ್ನಲೆಯ ವಿಚಾರವಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಹೇಳಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಶಾಂತಿಯ ಸ್ಥಿತಿಗೆ ಬದ್ಧತೆ:
ಯಾವುದೇ ಕಾರಣಕ್ಕೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಶಾಂತಿ ಕದಡುವುದಕ್ಕೆ ಅವಕಾಶ ನೀಡಲಾಗುದಿಲ್ಲ. ಕೋಮು ಗಲಭೆಗಳಿಗೆ ಕಾರಣರಾದವರು, ಯಾವುದೇ ಸಮುದಾಯದವರೇ ಆಗಲಿ – ಕಾನೂನು ತಮ್ಮದೇ ರೀತಿಯಲ್ಲಿ ಕೆಲಸ ಮಾಡಲಿದೆ. ಸಮಾಜದ ಶಾಂತಿಯ ಕದಡುವವರ ವಿರುದ್ಧ ನಾವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ, ಎಂದರು.
ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ರಚನೆ:
ಇಂತಹ ಘಟನೆಗಳು ಪುನರಾವೃತ್ತಿಯಾಗದಂತೆ ಮುಂದಿನ ದಿನಗಳಲ್ಲಿ ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ಅನ್ನು ರಚಿಸಲಾಗುವುದು. ಇದು ನಕ್ಸಲ್ ವಿರೋಧಿ ಪಡೆಗಳ ಮಾದರಿಯಲ್ಲಿ ಕಾರ್ಯನಿರ್ವಹಿಸಲಿದೆ. ಶಾಂತಿ ಕಾಪಾಡಲು ಈ ವಿಶೇಷ ಪಡೆ ನಿರಂತರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದೆ ಎಂದು ಪರಮೇಶ್ವರ್ ಹೇಳಿದ್ದಾರೆ
ನಿವೃತ್ತ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ನಿರ್ವಹಣೆ:
ಈ ಟಾಸ್ಕ್ ಫೋರ್ಸ್ನ್ನು ನಿವೃತ್ತ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಡಿ ತರಬೇತಿ ನೀಡಿ ನಿಯೋಜಿಸಲಾಗುವುದು. ಶಾಂತಿಯನ್ನು ಕಾಪಾಡುವ ಕಾರ್ಯದಲ್ಲಿ ಯಾವುದೇ ರಾಜಕೀಯ ಪ್ರಭಾವ ಇರದಂತೆ ನಿರ್ವಹಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಹೇಳಿದ್ದಾರೆ.