ನವದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ನೀಡಿದ ಅರ್ಜಿಯ ಮೇರೆಗೆ ದೆಹಲಿ ಹೈಕೋರ್ಟ್ ಕೇಂದ್ರ ತನಿಖಾ ದಳಕ್ಕೆ (CBI) ನೋಟಿಸ್ ಜಾರಿ ಮಾಡಿದೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಕೇಜ್ರಿವಾಲ್ ಪ್ರಶ್ನಿಸಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ (Neena Bansal Krishna) ನೇತೃತ್ವದ ಪೀಠ ಪ್ರಕರಣದ ವಿಚಾರಣೆ ನಡೆಸಿ, ಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ, ಈ ನೋಟಿಸ್ ಗೆ 7 ದಿನಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದೆ.
ಸಿಬಿಐನ ಬಂಧನ ಮತ್ತು ರಿಮಾಂಡ್ ಆದೇಶ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ (Abhishek Manu Singhvi), ಬಂಧನದ ಅವಶ್ಯಕತೆ ಏನು? ಸಿಬಿಐ ಕೇಜ್ರಿವಾಲ್ ಅವರನ್ನು ಜೂನ್ನಲ್ಲಿ ಬಂಧಿಸುವ ಪ್ರಶ್ನೆಯೇ ಇಲ್ಲ. 2022 ರ ಎಫ್ಐಆರ್ ಅನ್ನು ಏಪ್ರಿಲ್ 2023 ರಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ವಾದಿಸಿದರು.
ಕೇಜ್ರಿವಾಲ್ ಅವರ ಅರ್ಜಿಯ ಮೇಲೆ ಕೋರ್ಟ್ ನೋಟಿಸ್ ಜಾರಿಗೊಳಿಸಿ ಸಿಬಿಐಗೆ ನಿರ್ದೇಶಿಸಿತು. ಪ್ರಕರಣದ ಮುಂದಿನ ವಿಚಾರಣೆ ಜುಲೈ 17ಕ್ಕೆ ಮುಂದೂಡಲಾಯಿತು.