ಬೆಳಗಾವಿ: ಬಸ್ ನಿಲ್ಲಿಸಿಲ್ಲ ಎಂಬ ಕಾರಣಕ್ಕೆ ಸಾರಿಗೆ ಬಸ್ ನ ಚಾಲಕ ಹಾಗೂ ನಿರ್ವಾಹಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಬೈಲಹೊಂಗಲ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಸ್ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟ್ಟಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರು ಓಡಿ ಹೋಗಿ ಬಸ್ ಹತ್ತಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆಯನ್ನು ಬೈದಿದ್ದಾರೆ ಎಂದು ಭಾವಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಮೊದಲು ನಿರ್ವಾಹಕರ ಮೇಲೆ ಹಲ್ಲೆ ನಡೆಸಿದ್ದಾರೆ. ಬಿಡಿಸಲು ಬಂದ ಚಾಲಕರ ಮೇಲೆ ಕೂಡ ಹಲ್ಲೆ ನಡೆಸಿದ್ದಾರೆ. ನಂತರ ಕಂಟ್ರೋಲರ್ ಕೊಠಡಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.
ಹೀಗಾಗಿ ಆಕ್ರೋಶಗೊಂಡ ಸಾರಿಗೆ ಸಿಬ್ಬಂದಿ ಬಸ್ ಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ, ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಚಲಿಸುವ ಬಸ್ ನಲ್ಲಿ ಮಹಿಳೆ ಹತ್ತಲು ಮುಂದಾಗಿದ್ದಕ್ಕೆ ಚಾಲಕ ಹತ್ತಬೇಡ ಎಂದು ಹೇಳಿದ್ದಾರೆ. ಆಗ ಮಹಿಳೆ ನಿರ್ವಾಹಕನಿಗೆ ಬೈಯ್ದಿದ್ದಾರೆ. ಇದರಿಂದ ಮಾತಿನ ಚಕಮಕಿಯಾಗಿದೆ. ಆಗ ಚಾಲಕ ಬಸ್ ನಿಲ್ಲಿಸಿದ್ದಾರೆ. ಅಲ್ಲಿದ್ದ ಸ್ಥಳೀಯ ಯುವಕರ ಗುಂಪು ನಿರ್ವಾಹಕ ಹಾಗೂ ಚಾಲಕರ ಮೇಲ ಹಲ್ಲೆ ನಡೆಸಿದ್ದಾರೆ ಎಂದು ಸಾರಿಗೆ ಸಿಬ್ಬಂದಿ ಆರೋಪಿಸಿದ್ದಾರೆ.