ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿಗಳ ಬೃಹತ್ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಯತ್ನಿಸಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದಿದ್ದಾರೆ.
ಕುಮಾರ ಕೃಪಾ ಗೆಸ್ಟ್ ಹೌಸ್ ರಸ್ತೆಯಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಿದ್ದು, ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿಗಳ ಬೃಹತ್ ಹಗರಣ ಖಂಡಿಸಿ ಜನವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಪ್ರತಿಭಟನೆ ನೆಡೆಸಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಲಾಯಿತು.
ಎಸ್ಟಿ ಸಮುದಾಯದ ಶ್ರೇಯೋಭಿವೃದ್ಧಿಗೆ ಮೀಸಲಿದ್ದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಗಳ ಭ್ರಷ್ಟಾಚಾರ, ಮೈಸೂರು ಮುಡಾ ಹಗರಣ ಸೇರಿದಂತೆ ಭ್ರಷ್ಟಾಚಾರದಲ್ಲಿ ಮುಳುಗಿ ಮತ್ತೊಂದೆಡೆ ರಾಜ್ಯದ ಬೊಕ್ಕಸವನ್ನೂ ಬರಿದು ಮಾಡಿಕೊಂಡು ಜನಸಾಮಾನ್ಯರ ಮೇಲೆ ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಜನ ವಿರೋಧಿ ರಾಜ್ಯ ಸರ್ಕಾರ ಕರ್ನಾಟಕ ಬಿಜೆಪಿ ಹೋರಾಟಕ್ಕೆ ಹೆದರಿ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಪೊಲೀಸರ ಮೂಲಕ ಕಾಂಗ್ರೆಸ್ ಸರ್ಕಾರ ಬಂಧಿಸಿತು ಎಂದು ಬರೆದುಕೊಂಡಿದ್ದಾರೆ.