ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ಶನಿವಾರ(ಇಂದು) ಕೊನೆಯ ದಿನವಾಗಿದ್ದು, ಈ ಬೆಳವಣಿಗೆಗಳ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ಮಾಡಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಬಿಎಸ್ವೈ ಹಾಗೂ ಕುಮಾರಸ್ವಾಮಿ ಮೂರನೇ ಬಾರಿ ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಇಬ್ಬರೂ ನಾಯಕರು ಮಾತನಾಡಿದ್ದಾರೆ. ಪದೇ ಪದೇ ಕುಮಾರಸ್ವಾಮಿ, ಬಿಎಸ್ವೈ ಭೇಟಿ ಮಾಡುತ್ತಿರುವುದು ಸರ್ಕಾರಕ್ಕೆ ಜೆಡಿಎಸ್ ಬೆಂಬಲ ನೀಡುವ ಕಾರ್ಯತಂತ್ರದ ಭಾಗವಾ ಎಂದು ಮೂಲಗಳು ತಿಳಿಸಿವೆ.
ಈ ನಡುವೆ, ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನವಾಗಿದ್ದು, ಕಾಂಗ್ರೆಸ್ ಬಿಎಸ್ವೈ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಬಿಜೆಪಿ ಶಾಸಕರು ಸದನದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಬಿಜೆಪಿ ವಿಪ್ ಜಾರಿ ಮಾಡಿದೆ.
ಪ್ರತಿಪಕ್ಷಗಳ ಕಾರ್ಯತಂತ್ರಕ್ಕೆ ಪ್ರತಿತಂತ್ರಗಳ ಬಗ್ಗೆ ಚರ್ಚಿಸುವ ಸಂಬಂಧ ಶಾಸಕಾಂಗ ಸಭೆ ನಡೆಸಿದ ಸಿಎಂ ಯಡಿಯೂರಪ್ಪ, ಕೊರೊನಾ ಕಿಟ್ ಹಾಗೂ ಪರಿಹಾರ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪ ಮಾಡಿರುವ ಕಾಂಗ್ರೆಸ್ನ ಬಾಯಿ ಮುಚ್ಚಿಸಲು ಬಿಜೆಪಿ ಶಾಸಕರು ಸಚಿವರ ಬೆನ್ನಿಗೆ ನಿಲ್ಲುವಂತೆ ಸಭೆಯಲ್ಲಿ ಸೂಚನೆ ನೀಡಲಾಗಿದೆ.
ಬಹಳಷ್ಟು ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿದಂತೆ ಮಹತ್ವದ ಮಸೂದೆಗಳು ಮಂಡನೆಯಾಗಿ ಅಂಗೀಕಾರ ಪಡೆದುಕೊಳ್ಳಲಿರುವ ಸಾಧ್ಯತೆ ಇರುವುದರಿಂದ ಬೆಳಿಗ್ಗೆಯಿಂದ ಕಲಾಪ ನಡೆಯಲಿದ್ದು, ಕಲಾಪ ಮುಗಿಯುವವರೆಗೂ ಸದನದಲ್ಲಿ ಹಾಜರಿರುವಂತೆ ಬಿಜೆಪಿ ತನ್ನ ಶಾಸಕರಿಗೆ ಕಟ್ಟಪ್ಪಣೆ ವಿಧಿಸಿದೆ.
ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...








