ಮುಂಬಯಿ: ಪ್ರೀತಿ ನಿರಾಕರಿಸಿದ್ದಕ್ಕೆ ಜನನಿಬಿಡ ಪ್ರದೇಶದಲ್ಲೇ ಯುವಕನೊಬ್ಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಮಹಾರಾಷ್ಟ್ರದ (Maharashtra) ಪುಣೆ ಜಿಲ್ಲೆಯ ಯರವಾಡದಲ್ಲಿ ನಡೆದಿದೆ. ಕತ್ರಜ್ ನಿವಾಸಿ ಶುಭದಾ ಶಂಕರ್ ಕೊಡಾರೆ (28) ಹತ್ಯೆಯಾಗಿರುವ ಯುವತಿ. ಕೃಷ್ಣ ಸತ್ಯನಾರಾಯಣ್ ಕನೋಜ (30) ಕೊಲೆ ಮಾಡಿರುವ ಆರೋಪಿ ಎನ್ನಲಾಗಿದೆ.
ಕೊಲೆಯಾಗಿರುವ ಯುವತಿ ಹಾಗೂ ಆರೋಪಿ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಖಾಸಗಿ ಕಂಪನಿಯೊಂದರ ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಯುವಕನಿಗೆ ಯುವತಿಯ ಮೇಲೆ ಪ್ರೀತಿ ಅಂಕುರಿಸಿದೆ. ಇಬ್ಬರ ಮಧ್ಯೆ ಪ್ರೀತಿ ಹಾಗೂ ಹಣಕಾಸಿನ ವಿಚಾರದಲ್ಲಿ ಜಘಲವಾಗಿದೆ. ಇದರಿಂದ ಆಕ್ರೋಶಗೊಂಡ ಆರೋಪಿಯು ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ.
ಯುವತಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಸ್ಥಳೀಯರು ಆರೋಪಿಯನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.