ದೆಹಲಿಯಲ್ಲಿ ಶೆಟ್ಟರ್ ರಾಜ್ಯದಲ್ಲಿ ಟೆನ್ಶನ್
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣ ಸದ್ದು ಮಾಡುತ್ತಿದೆ. ಇದೇ ವಿಷಯಕ್ಕೆ ಸಂಬಂಧ ಪಟ್ಟಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೈಕಮಾಂಡ್ ಅಂಗಳಕ್ಕೆ ಹೋಗಿ ಚರ್ಚೆ ಮಾಡಿ ಬಂದಿದ್ದಾರೆ. ನಿನ್ನೆ ಅಷ್ಟೆ ಬೊಮ್ಮಾಯಿ ಅವರು ವಾಪಸ್ ಬಂದಿದ್ದಾರೆ. ಅದರ ಹಿಂದೆಯೆ ಜಗದೀಶ್ ಶೆಟ್ಟರ್ ಅವರಿಗೆ ಹೈಕಮಾಂಡ್ ಬುಲಾವ್ ಕೊಟ್ಟಿರುವುದು ಕೇಂದ್ರದ ನಡೆಯ ಬಗ್ಗೆ ಅನುಮಾನ ಸೃಷ್ಟಿಯಾಗಿದೆ. ಇಷ್ಟು ದಿನಗಳ ನಂತರ ಈಗ್ಯಾಕೆ ಶೆಟ್ಟರ್ ಅವರು ದೆಹಲಿ ಪ್ರವಾಸ ಕೈ ಗೊಂಡಿದ್ದಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಿಟ್ ಕಾಯಿನ್ ಹಗರಣ ಸದ್ದು ಮಾಡುತ್ತಿರುವ ಮಧ್ಯೆಯೇ ನಾಯಕತ್ವ ಬದಲಾವಣೆ ಬಗ್ಗೆಯೂ ವದಂತಿ ಹಬ್ಬಿತ್ತು. ಮುಖ್ಯಮಂತ್ರಿ ಬೊಮ್ಮಾಯಿ ಅವರು ಎರಡು ದಿನಗಳ ಕಾಲ ದೆಹಲಿಗೆ ತೆರಳಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನ ಭೇಟಿ ಮಾಡಿ ವಿವರಣೆ ನೀಡಿದ್ದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ನನ್ನ ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ಬಂದಿದ್ದೇನೆ. ಯಾವುದೇ ರಾಜಕೀಯ ನಾಯಕರನ್ನು ಈ ವೇಳೆ ಭೇಟಿಯಾಗುವುದಿಲ್ಲ. ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ ಎಂದು ತಿಳಿಸಿದರು.








