ಲಾಕ್ ಡೌನ್ ವಿಸ್ತರಣೆ ಬಗ್ಗೆ ಬೊಮ್ಮಾಯಿ ಸುಳಿವು
ಹಾವೇರಿ : ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಜೂನ್ ನಾಲ್ಕರಂದು ಸಿಎಂ ಬಿ ಎಸ್ ಯಡಿಯೂರಪ್ಪ ಸಭೆ ನಡೆಸುತ್ತಾರೆ. ಈ ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ತೀರ್ಮಾನಕ್ಕೆ ಬರಲಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ರಟ್ಟಿಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ವಿಸ್ತರಣೆ ಬಗ್ಗೆ ಜೂನ್ 4ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿಯಲ್ಲಿ ಸಭೆ ಮಾಡುತ್ತಿದ್ದಾರೆ.
ಸಭೆಯ ಪೂರ್ವದಲ್ಲಿ ತಜ್ಞರ ವರದಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಸಿಎಂ ತೀರ್ಮಾನ ಮಾಡುತ್ತಾರೆ.
ಲಾಕ್ ಡೌನ್ ಯಾವ ರೀತಿ ಇರಬೇಕು, ಏನೇನು ಇರಬೇಕು, ಏನೇನು ಇರಬಾರದು ಎಂಬುದರ ಬಗ್ಗೆ ಜೂನ್ 5ರಂದು ಸಿಎಂ ತೀರ್ಮಾನ ಮಾಡುತ್ತಾರೆ.
ಹಲವು ಜಿಲ್ಲೆಗಳಲ್ಲಿ ಕೊರೊನಾ ಕಡಿಮೆ ಆಗಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಕಡಿಮೆ ಆಗಬೇಕಿದೆ. ಎಲ್ಲವನ್ನೂ ಗಮನಿಸುತ್ತಿದ್ದೇವೆ ಎಂದು ತಿಳಿಸಿದರು.
ಇದೇ ವೇಳೆ ಮೂರನೇ ಅಲೆ ಬಗ್ಗೆ ಮಾತನಾಡಿ, ಮೂರನೇ ಅಲೆ ಎದುರಿಸಲು ಈಗಾಗಲೇ ಸರ್ಕಾರ ಸಜ್ಜಾಗುತ್ತಿದೆ. ಆಕ್ಸಿಜನ್ ಬೆಡ್ ಗಳು, ವೆಂಟಿಲೇಟರ್, ಐಸಿಯು ಹೆಚ್ಚು ಮಾಡುತ್ತಿದ್ದೇವೆ.
ಪ್ರತಿಯೊಂದು ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್ ಮಾಡಬೇಕೆಂದು ನಿರ್ಧರಿಸಿ ಅದಕ್ಕೆ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದರು.