ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ – ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ
ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಸರ್ಕಾರ ಮತ್ತೆ ಲಾಕ್ ಡೌನ್ ಮಾಡಲ್ಲ. ಲಾಕ್ ಡೌನ್ ಮಾಡುತ್ತೆ ಅನ್ನೋ ಭಯ ಬೇಡ. ಈ ಬಗ್ಗೆ ಸ್ವತಃ ಮುಖ್ಯ ಮಂತ್ರಿಗಳೇ ಹೇಳಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಇನ್ನು ಇಂದಿನ ಲಾಕ್ ಡೌನ್ ಬಹುತೇಕ ಯಶಸ್ವಿಯಾಗಿದೆ. ಎಲ್ಲಾ ಜಿಲ್ಲೆಗಳಲ್ಲೂ ಲಾಕ್ ಡೌನ್ಗೆ ಜನ ಉತ್ತಮ ಬೆಂಬಲ ನೀಡಿದ್ದಾರೆ. ಜನರು ಸ್ವಯಂ ಪ್ರೇರಿತವಾಗಿ ಲಾಕ್ಡೌನ್ ಸಾಥ್ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು ಬಿಟ್ಟು ಊರಿನತ್ತ ತೆರಳುತ್ತಿರುವ ಜನರ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಬೊಮ್ಮಾಯಿ, ಯಾರು ಕೂಡ ಭಯಪಡುವ ಅಗತ್ಯವಿಲ್ಲ. ಬೆಂಗಳೂರು ಬಿಟ್ಟು ಹೋಗಬೇಡಿ. ಬೆಂಗಳೂರಿನಲ್ಲಿ ಸುರಕ್ಷಿತವಾಗಿರಿ ಎಂದು ಗೃಹ ಸಚಿವರು ಮನವಿ ಮಾಡಿಕೊಂಡಿದ್ದಾರೆ. ಈ ನಡುವೆ ಕೊರೋನಾ ವಾರಿಯರ್ಸ್ಗೂ ಸೋಂಕು ಹರಡುತ್ತಿದೆ. ಈ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು. ಜನರು ಸಹಕಾರ ನೀಡಬೇಕು ಎಂದು ಅವರು ತಿಳಿಸಿದ್ದಾರೆ.
ಇನ್ನೊಂದೆಡೆ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದೆ. ಹೀಗಾಗಿ ಜನರು ಭಯಗೊಂಡು ತಮ್ಮ ಊರುಗಳತ್ತ ತೆರಳುತ್ತಿರುವುದು ಇದೀಗ ಸಾಮಾನ್ಯವಾಗಿದೆ. ಹಾಗೇ ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್ ಆಗುತ್ತೆ ಅನ್ನೋ ಆತಂಕ ಕೂಡ ಇತ್ತು. ಇದೀಗ ಗೃಹಸಚಿವರು ಲಾಕ್ ಡೌನ್ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ಶನಿವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆ 5 ಗಂಟೆ ತನಕ ಲಾಕ್ ಡೌನ್ ಇರುತ್ತೆ.