ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬದಂದು ಅದ್ಧೂರಿ ಗಣೇಶೋತ್ಸವ ಆಚರಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬ್ರೇಕ್ ಹಾಕಿದೆ. ಪ್ರತಿ ವರ್ಷ ಗಣೇಶ ಹಬ್ಬವನ್ನ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಹೇಳಿದೆ. ಹೀಗಾಗಿ ಈ ವರ್ಷ ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ನಿರ್ಬಂಧ ಹೇರಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ಗಣೇಶ ವಿಸರ್ಜನೆಗೆ ಯಾವುದೇ ಕೆರೆ, ಟ್ಯಾಂಕ್ ವ್ಯವಸ್ಥೆ ಇರಲ್ಲ. ಎಲ್ಲರೂ ಮನೆಯಲ್ಲಿಯೇ ಗಣೇಶ ವಿಸರ್ಜನೆ ಮಾಡಿಕೊಳ್ಳಬೇಕು. ಕೆರೆಗಳಲ್ಲಿ ಗಣೇಶ ವಿಸರ್ಜನೆಗೆ ಅವಕಾಶ ಇಲ್ಲ. ಜೊತೆಗೆ ಟ್ಯಾಂಕ್ಗಳ ವ್ಯವಸ್ಥೆಯೂ ಇರಲ್ಲ ಎಂದರು.
ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಇಟ್ಟು ಕಾನೂನು ಕ್ರಮ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಎಚ್ಚರಿಸಿದೆ.
ಸ್ವಾತಂತ್ರ್ಯ ದಿನಾಚರಣೆಗೆ ಸಾರ್ವಜನಿಕರಿಗೆ ಆಹ್ವಾನ ಇಲ್ಲ
ಈ ಬಾರಿ ಸ್ವಾತಂತ್ರ್ಯ ದಿನವನ್ನ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮಾಡುತ್ತೇವೆ. ಕಾರ್ಯಕ್ರಮಕ್ಕೆ ಯಾವುದೇ ಸಾರ್ವಜನಿಕರಿಗೆ ಆಹ್ವಾನ ಇರುವುದಿಲ್ಲ. ಕೇವಲ ಮುಖ್ಯಮಂತ್ರಿಗಳು ಮಾತ್ರ ಧ್ವಜಾರೋಹಣ ಮಾಡಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮತ್ತು ಕವಾಯತಿಗೆ ಬ್ರೇಕ್ ಹಾಕಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.
ಸ್ವಾತಂತ್ರೋತ್ಸವ ಆಚರಣೆ ವೇಳೆ 75 ಮಂದಿ ಕೊರೊನಾ ವಾರಿಯರ್ ಹಾಗೂ 25 ಕೊರೊನಾದಿಂದ ಗುಣಮುಖರಾದವರಿಗೆ ಅವಕಾಶ ನೀಡಲಾಗಿದೆ.
ಮುಖ್ಯಮಂತ್ರಿಗಳಿಂದ ಕವಾಯಿತು ವೀಕ್ಷಣೆಯೂ ಕೂಡ ಇಲ್ಲ. ಹೆಲಿಕಾಪ್ಟರ್ ಮೂಲಕ ಪುಷ್ಪ ವೃಷ್ಠಿ ಕೂಡ ಇರುವುದಿಲ್ಲ. ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಇರಲಿದೆ ಎಂದರು.