ಕರ್ನಾಟಕ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿರುವ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಮಹತ್ವ ಸಿಕ್ಕಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ನಡೆದ ಮಾತುಕತೆಗಳ ಬಳಿಕ ಇಂದು ಬೆಳಗ್ಗೆ ಮಹತ್ವದ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಯಲಿದ್ದು, ಈ ಸಭೆಯಲ್ಲಿ ಡಿಕೆ ಶಿವಕುಮಾರ್ ಭಾಗವಹಿಸಲಿದ್ದಾರೆ.
ದೆಹಲಿ ಸಭೆಯಲ್ಲಿ ಏನೆಲ್ಲ ಚರ್ಚೆಯಾಯಿತು ಎಂಬ ಪ್ರಶ್ನೆಗೆ ನಿನ್ನೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಾಳೆ ಮಾತನಾಡುತ್ತೇನೆ ಎಂದು ಮಾತ್ರ ಹೇಳಿ ಕುತೂಹಲ ಹೆಚ್ಚಿಸಿದ್ದಾರೆ. ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
ಇದೇ ವೇಳೆ, ದೆಹಲಿಯಲ್ಲಿ ನಡೆದ ಹೈಕಮಾಂಡ್ ಚರ್ಚೆಗಳ ಸಂಪೂರ್ಣ ವಿವರ ನೀಡಲು ಸಿಎಂ ಸಿದ್ದರಾಮಯ್ಯ ಇಂದು ತಮ್ಮ ಸಚಿವ ಸಂಪುಟದ ಎಲ್ಲಾ ಸಚಿವರ ಸಭೆ ಕರೆದಿದ್ದಾರೆ. ಈ ಮಹತ್ವದ ಸಭೆ ಸಿಎಂ ನಿವಾಸದಲ್ಲಿ ನಡೆಯಲಿದ್ದು, ರಾಜ್ಯದ ಮುಂದಿನ ರಾಜಕೀಯ ಬೆಳವಣಿಗೆಗಳಿಗೆ ದಿಕ್ಕು ತೋರಿಸುವ ಸಾಧ್ಯತೆ ಇದೆ.
ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನರ್ರಚನೆ ಹಾಗೂ ಅಧಿಕಾರ ಹಂಚಿಕೆ ಕುರಿತಂತೆ ಅಂತಿಮ ನಿರ್ಧಾರಕ್ಕೆ ಬರಬಹುದೆಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿವೆ.







