ಬೆಂಗಳೂರು: ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ (Kidnap Case) ಹೈಕೋರ್ಟ್ (High Court) ಭವಾನಿ ರೇವಣ್ಣ (Bhavani Revanna) ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ. ಈ ಮೂಲಕ ಭವಾನಿ ರೇವಣ್ಣ ನಿಟ್ಟುಸಿರು ಬಿಡುವಂತಾಗಿದೆ.
ಭವಾನಿ ರೇವಣ್ಣಗೆ ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಈಗಾಗಲೇ ಭವಾನಿ ರೇವಣ್ಣ ಅವರು ಪೊಲೀಸರ 85 ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕು ಎಂಬುವುದಿಲ್ಲ ಎಂದು ಎಂದು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಹೇಳಿತು.
ಪ್ರಜ್ವಲ್ ರೇವಣ್ಣದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಈ ಪ್ರಕರಣದಲ್ಲಿ ರೇವಣ್ಣ, ಭವಾನಿ ರೇವಣ್ಣ ಹಾಗೂ ಬಾಬು ವಿರುದ್ಧ ದೂರು ದಾಖಲಾಗಿತ್ತು. ಎಸ್ಐಟಿ ಅಧಿಕಾರಿಗಳು ಈಗಾಗಲೆ ಆರೋಪಿ ಬಾಬು ಅನ್ನು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ರೇವಣ್ಣ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರೂ ಕೂಡ ಎಸ್ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್ ನೀಡಲಾಗಿತ್ತು. ಇತ್ತ ಭವಾನಿ ರೇವಣ್ಣ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ನೀರಿಕ್ಷಣಾ ಜಾಮೀನು ಅರ್ಜಿ ತಿರಸ್ಕತಿಸಿತ್ತು. ಹೀಗಾಗಿ ಭವಾನಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿನ ಏಕ ಸದಸ್ಯ ಪೀಠ ಈ ಹಿಂದೆ ಭವಾನಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಕಾಯ್ದಿರಿಸಿತ್ತು. ಈಗ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ನೀಡಿದೆ.