ಮಾಜಿ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅವರು ಎದುರಿಸುತ್ತಿದ್ದ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನ್ ಕುಮಾರ್ ಕಟೀಲ್ ವಿರುದ್ಧ ದಾಖಲಾದ FIR ರದ್ದುಗೊಳಿಸುವ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಜನಾಧಿಕಾರ ಸಂಘರ್ಷ ಪರಿಷತ್ತಿನ ಆದರ್ಶ ಅಯ್ಯರ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ಮಾಡಿ, ಇದನ್ನು ಅಸ್ಪಷ್ಟ ದೂರು ಹಾಗೂ ಸಂಪೂರ್ಣ ಊಹೆಯ ದೂರು ಎಂದು ಹೇಳಿ, ಮೇಲ್ಮನವಿಯನ್ನು ವಜಾಗೊಳಿಸಿತು.
ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮತ್ತು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವರ ವಿರುದ್ಧ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಈ ಪ್ರಕರಣವನ್ನು ರದ್ದುಪಡಿಸಲು ನಳಿನ್ ಕುಮಾರ್ ಕಟೀಲ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಸೆಪ್ಟೆಂಬರ್ 30ರಂದು ಹೈಕೋರ್ಟ್ ಅವರ ಅರ್ಜಿಯನ್ನು ವಿಚಾರಣೆ ಮಾಡಿ, ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಆದೇಶ ಹೊರಡಿಸಿತು. ಇದರ ಫಲವಾಗಿ, ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇನ್ನಿತರರಿಗೆ ಬಿಗ್ ರಿಲೀಫ್ ದೊರಕಿತು.
ಹೈಕೋರ್ಟ್ ಆದೇಶವು ಅವರ ವಿರುದ್ಧ ದಾಖಲಾದ ಎಫ್ಐಆರ್ ಅನ್ನು ರದ್ದುಗೊಳಿಸಿದ ಪರಿಣಾಮ, ಅವರು ಕಾನೂನು ಹೋರಾಟದಲ್ಲಿ ದೊಡ್ಡ ಜಯವನ್ನು ಗಳಿಸಿದ್ದಾರೆ.








