ಕಲಬುರಗಿ : ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಬಿಜೆಪಿಯ ಕೆಲ ಸಚಿವಸ್ಥಾನ ಆಕಾಂಕ್ಷಿಗಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದ್ರೆ ಕಂದಾಯ ಸಚಿವ ಆರ್.ಅಶೋಕ್ ಈ ಬಗ್ಗೆ ಪ್ರತಿಕ್ರಿಯಿಸಿ, ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿರುವುದು ಸಂಪುಟಕ್ಕೆ ಹೊಸಬರ ಸೇರ್ಪಡೆ ಅಥವಾ ಕೆಲವರನ್ನು ಕೈಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಲು ಅಲ್ಲ. ಅತಿವೃಷ್ಟಿ ಬಗ್ಗೆ ಚರ್ಚಿಸಿ ಹೆಚ್ಚಿನ ಪರಿಹಾರ ತರುವುದಕ್ಕಾಗಿ ಎಂದು ತಿಳಿಸಿದರು.
ಸಂಪುಟಕ್ಕೆ ಹೊಸಬರ ಸೇರ್ಪಡೆ ಮತ್ತು ಕೆಲವು ಹಳಬರನ್ನು ತೆಗೆಯುವುದು ಸಿಎಂಗೆ ಬಿಟ್ಟ ವಿಚಾರ. ಸರ್ಕಾರ ರಚನೆಗೆ ಕಾರಣರಾದವರಿಗೆ ಸಂಪುಟದಲ್ಲಿ ಸ್ಥಾನ ಸಿಗುವುದು ಖಚಿತ. ಆದರೆ ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ನಡೆಯುವುದು ಅನುಮಾನ. ಎಲ್ಲವೂ ಸಿಎಂ ಅವರ ವಿವರಣೆಗೆ ಬಿಟ್ಟದ್ದು ಎಂದು ಅಶೋಕ್ ಹೇಳಿದ್ದಾರೆ.