ಮಧ್ಯಪ್ರದೇಶ ಸರ್ಕಾರವನ್ನು ಉಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಪ್ರಯತ್ನಿಸುತ್ತಿದ್ದಾರೆ ಆಪರೇಷನ್ ಕಮಲಕ್ಕೆ ಒಳಗಾಗಿ ಬೆಂಗಳೂರಿಗೆ ಬಂದು ಬೀಡು ಬಿಟ್ಟಿರುವ ಶಾಸಕರನ್ನು ಮನವೊಲಿಸುವ ಪ್ರಯತ್ನ ನಡೆದಿದೆ. ಅದರ ಭಾಗವಾಗಿ ಮಧ್ಯಪ್ರದೇಶದ ಮಾಜಿ ಸಿ. ಎಂ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಶಾಸಕರನ್ನು ಭೇಟಿ ಮಾಡಲು ಬಂದಿದ್ದರು. ಈ ವೇಳೆ ಪೊಲೀಸರು ದಿಗ್ವಿಜಯ್ ಸಿಂಗ್ ಅವರು ರೆಸಾರ್ಟ್ ಒಳಗೆ ಹೋಗವುದನ್ನು ತಡೆದಿದ್ದಾರೆ. ದಿಗ್ವಿಜಯ್ ಸಿಂಗ್ ಪೊಲೀಸರ ಬಳಿ ಮನವಿ ಮಾಡಿಕೊಂಡಿದ್ದರು. ಆದರೆ ಪೊಲೀಸರು ಮನವಿಯನ್ನು ನಿರಾಕರಿಸಿದ್ದಾರೆ. ಆಗ ದಿಗ್ವಿಜಯ್ ಸಿಂಗ್ ಧರಣಿಗೆ ಮುಂದಾದರು. ಈ ವೇಳೆ ದಿಗ್ವಿಜಯ್ ಸಿಂಗ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಥಳಕ್ಕೆ ಧಾವಿಸಿದ ಕೆಪಿಸಿಸಿ ನೂತನ ಅಧ್ಯಕ್ಷ ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ದಿಗ್ವಿಜಯ್ ಸಿಂಗ್ ಬೆಂಬಲಕ್ಕೆ ನಿಂತಿದ್ದಾರೆ. ಅಲ್ಲದೆ ಯಲಹಂಕದ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಇದ್ದ ದಿಗ್ವಿಜಯ್ ಸಿಂಗ್ ಅವರಿಗೆ ಸಾಥ್ ನೀಡಿದರು. ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬುದು ನಮಗೆ ತಿಳಿದಿದೆ. ಇಲ್ಲಿ ದಿಗ್ವಿಜಯ್ ಸಿಂಗ್ ಒಬ್ಬರೇ ಇಲ್ಲ. ನಾನು ಅವರ ಬೆಂಬಲಕ್ಕಿದ್ದೇನೆ. ಕಾನೂನು, ಸುವ್ಯವಸ್ಥೆ ಆದೇಶವನ್ನು ಸರ್ಕಾರ ಜಾರಿಗೆ ತರಬೇಕಾದ ಪರಿಸ್ಥಿತಿ ಬರಬಾರದು ಎಂದು ನಾನು ಸುಮ್ಮನಿದ್ದೇನೆ. ಎಂದು ಧರಣಿ ನಿರತ ದಿಗ್ವಿಜಯ್ ಸಿಂಗ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ಇಂದು ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಿಗ್ವಿಜಯ್ ಸಿಂಗ್ ಅವರನ್ನು ಡಿಕೆ ಶಿವಕುಮಾರ ಭೇಟಿ ಮಾಡಿದ್ದರು. ದಿಗ್ವಿಜಯ್ ಸಿಂಗ್ ಅವರಿಗೆ ಭರ್ಜರಿ ಸ್ವಾಗತ ಕೋರಿದ್ದರು. ಇದಾದ ಬಳಿಕ ಮುಂದಿನ ಕಾರ್ಯವೈಖರಿ ಬಗ್ಗೆ ವಿಸ್ತ್ರೃತ ಚರ್ಚೆ ನಡೆಸಿದರು.









