ಬಿಜೆಪಿ ರೈತರ ಬೆನ್ನಿಗೆ ಚೂರಿ ಹಾಕುತ್ತಿದೆ : ಹೆಚ್ಡಿಕೆ
ಬೆಂಗಳೂರು : ರಸಗೊಬ್ಬರ ದರ ಹೆಚ್ಚಳ ಕುರಿತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿದ್ದ ಬಿಜೆಪಿ ಸರಕಾರ, ರೈತರ ಬಗ್ಗೆ ಮೃದು ಮಾತಾಡುತ್ತಲೇ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ. ಇದೀಗ ರಸಗೊಬ್ಬರ ದರವನ್ನು ಶೇಕಡ 60ರಷ್ಟು ಹೆಚ್ಚಳ ಮಾಡಿದೆ.
ಕೇಂದ್ರದ ರಸಗೊಬ್ಬರ ಸಚಿವ ಡಿವಿ ಸದಾನಂದ ಗೌಡರು ರಸಗೊಬ್ಬರ ಕಂಪನಿಗಳ ಪ್ರತಿನಿಧಿಗಳ ಜತೆ ಸಭೆ ನಡೆಸುವುದರಿಂದ ಈ ಸಮಸ್ಯೆ ಬಗೆಹರಿಯುವುದಿಲ್ಲ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಬಾರದು.
ಸದಾನಂದ ಗೌಡರು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಮಾತನಾಡಿ ರಸಗೊಬ್ಬರಕ್ಕಾಗಿ ನೀಡುತ್ತಿದ್ದ 1.5ಲಕ್ಷ ಕೋಟಿಯಷ್ಟು ಸಬ್ಸಿಡಿ ಮುಂದುವರೆಸುವಂತೆ ಮನವರಿಕೆ ಮಾಡಿಕೊಡಬೇಕು. ಈಗ ಅದನ್ನು ಶೇ.50ರಷ್ಟು ಕಡಿತ ಮಾಡಲಾಗಿದೆ.
ಬಾಯಿ ಮಾತಿನಿಂದ ರೈತರ ಬಾಳು ಬೆಳಗಲು ಸಾಧ್ಯವಿಲ್ಲ. ರೈತರ ಮತಗಳ ಮೇಲೆ ಕಣ್ಣಿಟ್ಟು ಎಷ್ಟು ದಿನ ಸುಳ್ಳಿನ ಅರಮನೆ ಕಟ್ಟುತ್ತೀರಿ? ಇನ್ನಾದರೂ ರೈತರಿಗೆ ಸಹನೀಯ ಬದುಕು ಕಟ್ಟಿಕೊಳ್ಳಲು ಅವಕಾಶ ಕೊಡಿ. ರಸಗೊಬ್ಬರದ ಮೇಲಿನ ದರ ಹೆಚ್ಚಳ ವಾಪಸ್ ಪಡೆಯಿರಿ ಎಂದು ಒತ್ತಾಯಿಸಿದ್ದಾರೆ.










