ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಲಂಗುಲಗಾಮಿಲ್ಲದೇ ಏರಿಕೆ ಆಗುತ್ತಲೇ ಇದೆ. ಈ ಹಿನ್ನೆಲೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬಳಿಕ ಮತ್ತೆ ರಾಜ್ಯದಲ್ಲಿ ಲಾಕ್ ಡೌನ್ ಆಗಲಿದೆ ಎಂಬ ವದಂತಿ ಎಲ್ಲೆಲ್ಲೂ ಹರಿದಾಡುತ್ತಿದೆ.
ಏತನ್ಮಧ್ಯೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಮಾತನಾಡುತ್ತಾ, ಎಸ್.ಎಸ್.ಎಲ್.ಸಿ ಪರೀಕ್ಷೆ ಬಳಿಕ ಕೊರೊನಾ ಸೋಂಕು ಹರಡುವಿಕೆಗೆ ಬ್ರೇಕ್ ಹಾಕುತ್ತೇವೆ ಎಂದು ಪರೋಕ್ಷವಾಗಿ ಲಾಕ್ ಡೌನ್ ಬಗ್ಗೆ ಸುಳಿವು ನೀಡಿದ್ದಾರೆ.
ವಿಧಾನಸೌಧದಲ್ಲಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ದಿನೇ ದಿನೇ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅತಿವೇಗವಾಗಿ ಹಬ್ಬುತ್ತಿರುವ ಕೊರೊನಾಗೆ ಬ್ರೇಕ್ ಹಾಕಬೇಕಿದೆ. ಆಗ ಮಾತ್ರ ಕೊರೊನಾ ತಡೆ ಸಾಧ್ಯವಾಗುತ್ತದೆ. ಸದ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿದ್ದು, ಈಗಲೇ ಕಠಿಣ ಕ್ರಮಕ್ಕೆ ಮುಂದಾದರೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅಡ್ಡಿಯಾಗುತ್ತದೆ. ಹೀಗಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬಳಿಕ ಕಠಿಣ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಅಶೋಕ್ ಪುನರುಚ್ಚರಿಸಿದ್ದಾರೆ.