ಬೆಂಗಳೂರು: ಇಲ್ಲಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳವಾರ 50ಕ್ಕೂ ಅಧಿಕ ಸಿಸಿಬಿ ಅಧಿಕಾರಿಗಳು ಜೈಲಿನ ಮೇಲೆ ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಜೈಲಿನಿಂದಲೇ ಸಂಚು ಹೂಡಲಾಗಿದೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ಈ ಸಂದರ್ಭದಲ್ಲಿ ಜೈಲಿನ ಕೈದಿಗಳ ಬಳಿ ನಗದು ಸಿಕ್ಕಿದ್ದು, ವಶಕ್ಕೆ ಪಡೆಯಲಾಗಿದೆ. ಚಾಕು ಕೂಡ ಅಲ್ಲಿಯೇ ಪತ್ತೆಯಾಗಿದೆ. 40 ಸಾವಿರ ರೂ. ನಗದು, 3 ಚಾಕು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಚುನಾವಣೆ ಮೇಲೆ ಪ್ರಭಾವ ಬೀರಲು ಪಿತೂರಿ, ಅಕ್ರಮ ಚಟುವಟಿಕೆಗಳು, ಡ್ರಗ್ಸ್ ಬಳಕೆ, ಪೂರೈಕೆ ಮತ್ತು ಮೊಬೈಲ್ ಬಳಕೆ ಪರಿಶೀಲಿಸುವುದಕ್ಕಾಗಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸಿಕ್ಕಿ ಬಿದ್ದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಹೇಳಿದ್ದಾರೆ.