ಬಾಗಲಕೋಟೆ : ಇನ್ನೊಂದು ದೇಶದವರ ಬಗ್ಗೆ ಬೇಹುಗಾರಿಕೆ ಮಾಡುವುದು ಖಂಡನೀಯ. ಇಂತಹ ಬೇಹುಗಾರಿಕೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬಾದಾಮಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎರಡನೇ ದಿನದ ಪ್ರವಾಸ ಮುಂದುವರಿಸಿದ್ದು, ಪಟ್ಟಣದಲ್ಲಿ ಕುಡಿಯುವ ನೀರಿನ ಕಾಮಗಾರಿ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಚೀನಾ ಬೇಹುಗಾರಿಕೆ ಪಟ್ಟಿಯಲ್ಲಿ ತಮ್ಮ ಹೆಸರು ಕೇಳಿ ಬಂದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಚೀನಾ ಬೇಹುಗಾರಿಕೆ ಪಟ್ಟಿಯಲ್ಲಿ ನನ್ನ ಹೆಸರು ಕೇಳಿ ಬಂದಿದ್ದು, ವಿದೇಶಿ ಬೇಹುಗಾರಿಕೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಬೇಕು. ಅವರನ್ನು ಪತ್ತೆ ಹಚ್ಚಿ ಬಲಿ ಹಾಕಬೇಕು. ಇದು ಕೇಂದ್ರ ಸರ್ಕಾರ ಮಾಡಬೇಕಾದ ಕೆಲಸ. ಇಂತಹ ಕೃತ್ಯ ನಡೆಯುವುದನ್ನು ತಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಬೇಕೆಂಬ ಕೂಗು ಕೇಳಿ ಬರುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈಗ ಸದ್ಯಕ್ಕೆ ನಾನು ಬಾದಾಮಿ ಶಾಸಕ. ಅಲ್ಲದೆ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದರು.