ಚಿಕ್ಕಮಗಳೂರು: ಮಾಜಿ ಸಚಿವ ಹಾಗೂ ಹಿರಿಯ ನಾಯಕ ಡಿ.ಬಿ. ಚಂದ್ರೇಗೌಡ (87) ಅವರು ಇಹಲೋಕ ತ್ಯಜಿಸಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಅವರು ಸಾವನ್ನಪ್ಪಿದ್ದಾರೆ. ಹೀಗಾಗಿ ಮೂಡಿಗೆರೆ ಅಡ್ಯಂತಾಯ ರಂಗ ಮಂದಿರದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಕಲ್ಪಿಸಲಾಗಿದೆ. ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಡಿ.ಬಿ. ಚಂದ್ರೇಗೌಡ ಅವರು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ 1971ರಲ್ಲಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಪಟೇಲ್ ಬೈರೇಗೌಡ, ಪುಟ್ಟಮ್ಮನವರ ಪುತ್ರರಾಗಿ 1936 ರ ಆಗಸ್ಟ್ 26 ರಂದು ಜನಿಸಿದ ಅವರು ವಕೀಲರಾಗಿ ತಮ್ಮ ಕಾಯಕ ಆರಂಭಿಸಿದ್ದರು.
ಚಂದ್ರೇಗೌಡ ಅವರು ಕಾನೂನು ಸಚಿವರಾಗಿ ಕೆಲಸ ಮಾಡಿದ್ದರು. ಅಲ್ಲದೇ, ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಕಾಂಗ್ರೆಸ್ ನಲ್ಲಿದ್ದ ಅವರು ನಂತರ ಬಿಜೆಪಿ ಸೇರಿದ್ದರು. ಇವರು ಮೂರು ಬಾರಿ ಶಾಸಕ, ಸಂದರಾಗಿ ಹಾಗೂ ಒಂದು ಬಾರಿ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ (Indira Gandhi) ರಾಜಕೀಯ ಮರು ಹುಟ್ಟು ನೀಡುವುದಕ್ಕಾಗಿ ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದಿರಾ ಗಾಂಧಿ ಸ್ಪರ್ಧೆಗೆ ಚಂದ್ರೇಗೌಡರು ಅವಕಾಶ ಮಾಡಿಕೊಟ್ಟಿದ್ದರು. ಡಿ.ಬಿ.ಚಂದ್ರೇಗೌಡರು ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ಮತ್ತು ರಾಜ್ಯಸಭೆ ಈ ನಾಲ್ಕೂ ಸದನಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಹಲವಾರು ಇಲಾಖೆಗಳಲ್ಲಿ ಅವರು ಕಾರ್ಯ ನಿರ್ವಹಿಸಿ, ಜನರ ಮನದಲ್ಲಿ ಅಚ್ಚಳಿಯದೆ ಉಳಿದಿದ್ದರು.