“ಚಂಪಾ” ಕಾವ್ಯನಾಮದ ಚಂದ್ರಶೇಖರ ಪಾಟೀಲ್ ಇನ್ನಿಲ್ಲ
ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ (82) ಇಂದು ಬೆಳಿಗ್ಗೆ 6:30ಕ್ಕೆ ನಿಧನರಾಗಿದ್ದಾರೆ. ಇವರು ದೀರ್ಘಕಾಲ ಅನಾರೋಗ್ಯ ದಿಂದ ಬಳಲುತ್ತಿದ್ದರು. ಚಂದ್ರಶೇಖರ ಪಾಟೀಲ್ ಕೋಣನಕುಂಟೆ ಕ್ರಾಸ್ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಕನ್ನಡ ಸಾಹಿತ್ಯ ಲೋಕದಲ್ಲಿ ‘ಚಂಪಾ’ ಕಾವ್ಯನಾಮದ ಮೂಲಕ ಪ್ರಖ್ಯಾತಿ ಪಡೆದಿದ್ದರು. ಇವರು ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ಬಹುಮುಖ ವ್ಯಕ್ತಿತ್ವದ ಮೂಲಕ ಗುರತಿಸಿಕೊಂಡಿದ್ದ, ಚಂಪಾ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್ 18ರಂದು ಜನಿಸಿದರು. ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್ ಸಂಸ್ಥೆಯಿಂದ ಇಂಗ್ಲಿಷ್ ಅಧ್ಯಯನದ ಡಿಪ್ಲೊಮ ಪಡೆದಿದ್ದರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲೀಷ್ ಭಾಷೆಯ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದರು.
ನಂತರ 2004-08ರ ಅವಧಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಕೊಡೆಗಳು, ಅಪ್ಪಾ, ಗುರುತಿನವರು, ಟಿಂಗರ ಬುಡ್ಡಣ್ಣ, ಕತ್ತಲ ರಾತ್ರಿ, ಗೋಕರ್ಣದ ಗೌಡಸಾನಿ, ನಾಟಕಗಳನ್ನು, ಬಾನುಲಿ, ಮಧ್ಯಬಿಂದು, ಇತ್ಯಾದಿ ಕವನಗಳನ್ನು ಹಾಗೇ ವಿಮರ್ಶಾ ಪ್ರಭಂದಗಳನ್ನು ರಚಿಸಿ ಕನ್ನಡ ಸಾಹಿತ್ಯ ಲೋಕಕ್ಕೆ ಕೊಡುಗೆ ನೀಡಿ ಅಜರಾಮರರಾಗಿದ್ದಾರೆ.