ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವಿನ ರಾಜಕೀಯ ವಾಕ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಯೋಜನೆ ಬೆಂಬಲಿಸುವ ಶಾಸಕರಿಗೆ ನಿವೇಶನ ನೀಡುವ ಭರವಸೆ ನೀಡಲಾಗಿದೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಗಂಭೀರ ಆರೋಪಕ್ಕೆ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್ ಸಿ ಬಾಲಕೃಷ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನೇರ ಸವಾಲು ಹಾಕಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಾಲಕೃಷ್ಣ, ಕುಮಾರಸ್ವಾಮಿ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದರು. ಕೇಂದ್ರ ಸಚಿವರಾಗಿ, ಮಾಜಿ ಮುಖ್ಯಮಂತ್ರಿಯಾಗಿ ಮತ್ತು ಹಿರಿಯ ನಾಯಕರಾಗಿ ಇಂತಹ ಕ್ಷುಲ್ಲಕ ಹೇಳಿಕೆಗಳನ್ನು ನೀಡುವುದು ಅವರಿಗೆ ಶೋಭೆ ತರುವುದಿಲ್ಲ. ಯಾರು ನಮಗೆ ಸೈಟ್ ಕೊಡುತ್ತಿದ್ದಾರೆ? ಇಂತಹ ಆಧಾರರಹಿತ ಸ್ಟೇಟ್ ಮೆಂಟ್ ಕೊಡುವುದಕ್ಕೆ ಅಸಹ್ಯ ಆಗಲ್ವಾ ಎಂದು ಅವರು ಖಾರವಾಗಿ ಪ್ರಶ್ನಿಸಿದರು.
ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಮಟ್ಟಕ್ಕೆ ಇಳಿದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ, ಇದೆಲ್ಲಾ ಕೇವಲ ಚಿಲ್ಲರೆ ರಾಜಕಾರಣ ಎಂದು ಬಾಲಕೃಷ್ಣ ಲೇವಡಿ ಮಾಡಿದರು.
ಆರೋಪಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿಯವರಿಗೆ ಮುಕ್ತ ಸವಾಲೆಸೆದ ಬಾಲಕೃಷ್ಣ, ಶಾಸಕರಿಗೆ ಸೈಟ್ ನೀಡಲಾಗುತ್ತಿದೆ ಎಂಬ ತಮ್ಮ ಹೇಳಿಕೆಗೆ ಕುಮಾರಸ್ವಾಮಿ ಅವರು ಸೂಕ್ತ ಆಧಾರ ಮತ್ತು ದಾಖಲೆಗಳನ್ನು ಜನರೆದುರು ಇಡಬೇಕು. ಒಂದು ವೇಳೆ ಅವರು ಈ ಆರೋಪವನ್ನು ಸಾಬೀತುಪಡಿಸಿದರೆ ನಾನು ಇಂದೇ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ. ಒಂದು ವೇಳೆ ಸಾಬೀತು ಮಾಡಲು ವಿಫಲವಾದರೆ ಅವರು ರಾಜಕಾರಣದಿಂದ ನಿವೃತ್ತಿ ಹೊಂದುತ್ತಾರಾ ಎಂದು ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದರು.
ರಾಜ್ಯ ಸರ್ಕಾರ ಅಭಿವೃದ್ಧಿ ಮಾಡುತ್ತಿಲ್ಲ, ಬದಲಾಗಿ ಕಾಂಗ್ರೆಸ್ ನಾಯಕರು ತಮ್ಮ ಸ್ವಂತ ಅಭಿವೃದ್ಧಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಕುಮಾರಸ್ವಾಮಿ ಅವರ ಮತ್ತೊಂದು ಆರೋಪಕ್ಕೂ ಬಾಲಕೃಷ್ಣ ತಿರುಗೇಟು ನೀಡಿದರು. ನಮ್ಮ ವಿರುದ್ಧದ ಈ ಆರೋಪದ ಬಗ್ಗೆ ಕೇಂದ್ರದಲ್ಲಿ ಅವರದೇ ಸರ್ಕಾರವಿದ್ದು ಬೇಕಾದರೆ ಸಿಬಿಐ ಮೂಲಕ ತನಿಖೆ ನಡೆಸಲಿ. ಸತ್ಯಾಸತ್ಯತೆ ಕೇಂದ್ರ ತನಿಖಾ ಸಂಸ್ಥೆಗಳಿಂದಲೇ ಹೊರಬರಲಿ ಎಂದು ಸವಾಲು ಹಾಕಿದರು.
ಗ್ರೇಟರ್ ಬೆಂಗಳೂರು ಬಿಡದಿ ಸ್ಮಾರ್ಟ್ ಸಿಟಿ ಟೌನ್ ಶಿಪ್ ಯೋಜನೆ ಇದೀಗ ರಾಮನಗರ ಜಿಲ್ಲೆಯ ನಾಯಕರ ನಡುವೆ ಭಾರೀ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಅಭಿವೃದ್ಧಿ ಯೋಜನೆ ವಿಚಾರದಲ್ಲಿ ಪರ ವಿರೋಧ ಚರ್ಚೆಗಳು ಇದೀಗ ವೈಯಕ್ತಿಕ ಟೀಕೆಗಳ ಹಂತಕ್ಕೆ ತಲುಪಿದ್ದು, ಮುಂದಿನ ದಿನಗಳಲ್ಲಿ ಈ ವಾಕ್ಸಮರ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ.








