ಸ್ನೇಹಿತರ ಜೊತೆ ಸೇರಿ ಬ್ಯಾಂಕ್ ಕಳ್ಳತನ ಮಾಡಿದ್ದ ಕ್ಲರ್ಕ್ ಕಮ್ ಕ್ಯಾಶಿಯರ್ ಅರೆಸ್ಟ್ – Saaksha Tv
ಬೆಳಗಾವಿ: ಮುರಗೋಡ ಡಿಸಿಸಿ ಬ್ಯಾಂಕ್ ಗೆ ಕನ್ನ ಹಾಕಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾಮದುರ್ಗ ತಾಲೂಕಿನ ತೋರನಗಟ್ಟಿ ಗ್ರಾಮದ ಬಸವರಾಜ ಹುಣಶಿಕಟ್ಟಿ (30), ಸವದತ್ತಿ ತಾಲೂಕಿನ ಯರಗಟ್ಟಿ ಗ್ರಾಮದ ಸಂತೋಷ ಕಂಬಾರ (31) ಹಾಗೂ ಜೀವಾಪೂರ ಗ್ರಾಮದ ಗಿರೀಶ್ ಬೆಳವಲ (26) ಬಂಧಿತ ಆರೋಪಿಗಳು. ಪೊಲೀಸರು ಬಂಧಿತ ಆರೋಪಿಗಳಿಂದ 4.37 ಕೋಟಿ ನಗದು ಹಣ, 1.63 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಮಾ.6ರಂದು ಸವದತ್ತಿ ತಾಲೂಕಿನ ಮುತಗೋಡ ಗ್ರಾಮದಲ್ಲಿನ ಮುರಗೋಡ ಡಿಸಿಸಿ ಬ್ಯಾಂಕ್ನಲ್ಲಿ 6 ಕೋಟಿ ನಗದು ಹಣ, ಚಿನ್ನಾಭರಣ ಕಳ್ಳತನವಾಗಿತ್ತಯ. ಈ ಕುರಿತು ಮುರಗೋಡ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಕೃಷ್ಣಪ್ಪ ಯಲಿಗಾರ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಆರೋಪಿಗಳಿಗಾಗಿ ಬಲೆ ಬೀಸಿದ್ದ ಪೊಲೀಸರು ಒಂದೇ ವಾರದಲ್ಲಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಆ ಪೈಕಿ ಡಿಸಿಸಿ ಬ್ಯಾಂಕ್ನಲ್ಲಿ ಕ್ಲರ್ಕ್ ಕಮ್ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಬಸವರಾಜ ಹುಣಸಿಕಟ್ಟಿ ಎಂಬಾತನೇ ನಕಲಿ ಕೀ ಬಳಸಿ ಆತನ ಇಬ್ಬರು ಸ್ನೇಹಿತರ ಜೊತೆಗೂಡಿ 4.37ಕೋಟಿ ಹಣ, 1.63ಕೋಟಿ ಮೌಲ್ಯದ ಚಿನ್ನಾಭರಣ ಕದ್ದುಕೊಂಡು ಪರಾರಿಯಾಗಿದ್ದಾಗಿ ಆರೋಪಿಗಳು ಬಾಯಿಬಿಟ್ಟಿದ್ದಾರೆ.
ಕದ್ದ ಹಣವನ್ನು ರಾಮದುರ್ಗ ತಾಲೂಕಿನ ತೋರನಗಟ್ಟಿ ಗ್ರಾಮದ ತನ್ನ ಕಬ್ಬಿನ ಗದ್ದೆಯಲ್ಲಿ ಆರು ಅಡಿ ತೆಗ್ಗು ತೆಗೆದು ಹೂತಿಟ್ಟಿದ್ದನು. ಬಳಿಕ ಯಾರಿಗೂ ಅನುಮಾನ ಬಾರದಂತೆ ನೀರು ಹಾಯಿಸಿದ್ದನು. ಇತ್ತ ಪ್ರಕರಣ ಬೆಳಕಿಗೆ ಬಂದ ನಂತರ ಬ್ಯಾಂಕ್ ಸಿಬ್ಬಂದಿಗೆ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.
ಈ ವೇಳೆ ಬಸವರಾಜ ಅವರು ತನ್ನ ಗೆಳೆಯರೊಂದಿಗೆ ಸೇರಿಕೊಂಡು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಕದ್ದು ಹೂತಿಟ್ಟಿದ್ದ ಸ್ಥಳದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ಎಲ್ಲಾ ಹಣವನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.