ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯ ಮೂಲಕ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ನೀಡುವ ಉದ್ದೇಶ ಸರ್ಕಾರ ಹೊಂದಿದೆ.
ಈ ಯೋಜನೆಯಡಿ ವಾಯುಯಾನ ಮತ್ತು ಜಲಸಾಹಸ ಚಟುವಟಿಕೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಪ್ರವಾಸಿಗರನ್ನು ಆಕರ್ಷಿಸಲು ಸೀ ಪ್ಲೇನ್, ಹೆಲಿಟ್ಯಾಕ್ಸಿ, ಜಾಯ್ ರೈಡ್ ಹಾಗೂ ರಿವರ್ ಕ್ರೂಸ್ ಸೇವೆಗಳಿಗೆ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.
ಇದರ ಜೊತೆಗೆ ಪ್ರವಾಸಿಗರಿಗೆ ಉತ್ತಮ ಸೇವೆ ಒದಗಿಸಲು ಟ್ಯಾಕ್ಸಿ ಮತ್ತು ಆಟೋ ಚಾಲಕರು, ಪೊಲೀಸ್ ಸಿಬ್ಬಂದಿಗೆ ವಿಶೇಷ ಕೌಶಲ್ಯ ತರಬೇತಿ ನೀಡುವ ಯೋಜನೆಯೂ ಸರ್ಕಾರ ಹೊಂದಿದೆ. ಇದು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸೇವಾ ಗುಣಮಟ್ಟವನ್ನು ಹೆಚ್ಚಿಸುವತ್ತ ಮಹತ್ವದ ಹೆಜ್ಜೆಯಾಗಿದೆ.
ಅದರ ಜೊತೆಗೆ ರಾಜ್ಯದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸ್ಥಳಗಳನ್ನು ಸಂಪರ್ಕಿಸುವ ಉದ್ದೇಶದಿಂದ ಗದಗ–ಕಪ್ಪತ್ತಗುಂಡ–ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್ ಅಭಿವೃದ್ಧಿಗೊಳಿಸಲಾಗುತ್ತದೆ.
ಇನ್ನೊಂದು ಪ್ರಮುಖ ಘೋಷಣೆಯಾಗಿ, ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪರ್ವತ ಪ್ರದೇಶವಾದ ಮುಳ್ಳಯ್ಯನಗಿರಿಯಿಂದ ಸೀತಾಳಯ್ಯನಗಿರಿ ಕೈಮರದವರೆಗೆ ರೋಪ್ ವೇ ನಿರ್ಮಾಣ ಮಾಡುವ ಯೋಜನೆಯನ್ನು ಸಿಎಂ ಘೋಷಣೆ ಮಾಡಿದ್ದಾರೆ. ಇದರಿಂದ ಪ್ರವಾಸಿಗರಿಗೆ ಸುಲಭವಾಗಿ ಪರ್ವತ ಸೌಂದರ್ಯವನ್ನು ಅನುಭವಿಸುವ ಅವಕಾಶ ದೊರೆಯಲಿದೆ.
ಈ ಯೋಜನೆಗಳಿಂದ ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರವು ಮತ್ತಷ್ಟು ವೇಗವಾಗಿ ಅಭಿವೃದ್ಧಿಯಾಗುವ ನಿರೀಕ್ಷೆ ವ್ಯಕ್ತವಾಗಿದೆ.







