ಬೆಡ್ ಮೀಸಲಿಡುವ ವಿಚಾರ : ನಾಳೆ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜತೆ ಸಿಎಂ ಸಭೆ
ಬೆಂಗಳೂರು : ಕೋವಿಡ್ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಬೆಡ್ ನೀಡದ ಹಿನ್ನೆಲೆ ಸಿಎಂ ಯಡಿಯೂರಪ್ಪ ಅವರು ಖುದ್ದಾಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಲು ಮುಂದಾಗಿದ್ದಾರೆ. ನಾಳೆ ಸಂಜೆ 4 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಖಾಸಗಿ ಆಸ್ಪತ್ರೆಗಳ ಮಾಲೀಕರ ಜೊತೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿದಿನ ಕೊರೊನಾ ಸ್ಫೋಟ ಆಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ 5 ಸಾವಿರ ಬೆಡ್ ಗಳನ್ನು ನೀಡಬೇಕೆಂದು ಸೂಚಿಸಿತ್ತು. ಆದ್ರೆ ಇದಕ್ಕೆ ಕೆಲ ಆಸ್ಪತ್ರೆಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ. ಅಲ್ಲದೆ 5 ಸಾವಿರ ಬೆಡ್ ಗಳ ಬದಲಾಗಿ 2500 ಬೆಡ್ ಗಳನ್ನು ಮಾತ್ರ ಖಾಸಗಿ ಆಸ್ಪತ್ರೆಗಳು ಮೀಸಲಿಟ್ಟಿದೆ. ಈ ಹಿನ್ನೆಲೆ ಬಾಕಿ ಉಳಿದಿರುವ 2500 ಬೆಡ್ ಪಡೆಯುವ ಬಗ್ಗೆ ನಾಳೆ ಚರ್ಚೆ ನಡೆಯಲಿದೆ. ಈ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸೇರಿದಂತೆ ಸಚಿವರು, ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.