ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಸಿಎಂ ನಿವಾಸ ಕಾವೇರಿಯ 6 ಮಂದಿ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕಾವೇರಿ ಹಾಗೂ ಗೃಹ ಕಚೇರಿ ಕೃಷ್ಣದ 100ಕ್ಕೂ ಹೆಚ್ಚು ಸಿಬ್ಬಂದಿಗೆ ಸಾಮೂಹಿಕ ಅಂಟಿಜೆನ್ ಟೆಸ್ಟ್ ನಡೆಸಲು ತೀರ್ಮಾನಿಸಲಾಗಿದೆ.
ಸಿಎಂ ಬಿಎಸ್ವೈ ನಂತರ ಕಾವೇರಿ ನಿವಾಸದ 6 ಜನ ಸಿಬ್ಬಂದಿಗೂ ಕೊರೊನಾ ಬಂದಿರುವುದು ಅಧಿಕಾರಿಗಳಲ್ಲಿ ಆತಂಕ ಸೃಷ್ಟಿಸಿದೆ.
ಕಾವೇರಿ ನಿವಾಸ ಕಾವೇರಿ ಹಾಗೂ ಗೃಹ ಕಚೇರಿ ಕೃಷ್ಣದಲ್ಲಿ ಕೆಲಸ ಮಾಡುವೆ ಅಡುಗೆ ಸಿಬ್ಬಂದಿ, ಸಹಾಯಕರು, ಕಾರು ಚಾಲಕರು, ಗಾರ್ಡನ್ ನೋಡಿಕೊಳ್ಳುವ ಸಿಬ್ಬಂದಿ, ಆಪ್ತ ಸಹಾಯಕರು ಹಾಗೂ ವಿಶೇಷವಾಗಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಪ್ರತಿನಿತ್ಯ 100ಕ್ಕೂ ಹೆಚ್ಚು ಮಂದಿ ಸಕ್ರಿಯವಾಗಿ ಕೆಲಸ ಮಾಡುತ್ತಿರುತ್ತಾರೆ. ಹೀಗಾಗಿ ಇಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿಗೂ ಆಂಟಿಜೆನ್ ಟೆಸ್ಟ್ ಮೂಲಕ ಕೊರೊನಾ ಪರೀಕ್ಷೆಯನ್ನು ಮಧ್ಯಾಹ್ನದ ಹೊತ್ತಿಗೆ ನಡೆಸಲು ತೀರ್ಮಾನಿಸಲಾಗಿದೆ.
ಭದ್ರತಾ ಪೊಲೀಸರ ಬದಲಾವಣೆ..!
ಮುಖ್ಯಮಂತ್ರಿಗಳ ನಿವಾಸ ಕಾವೇರಿ ಹಾಗೂ ಗೃಹ ಕಚೇರಿ ಕೃಷ್ಣಾಗೆ ನಿತ್ಯ ನೂರಾರು ಗಣ್ಯರು, ಸಚಿವರು, ಶಾಸಕರು, ಹಾಗೂ ಅಧಿಕಾರಿಗಳು ಬಂದು ಹೋಗುತ್ತಾರೆ. ಸಭೆ, ಸಮಾಲೋಚನೆ ಸೇರಿದಂತೆ ಎರಡೂ ಕಡೆ ನಿತ್ಯ ಬಿರುಸಿನ ಚಟುವಟಿಕೆ ನಡೆಯುತ್ತಿರುತ್ತದೆ. ಹೀಗಾಗಿ ಎರಡೂ ಕಟ್ಟಡಗಳಿಗೆ 50ಕ್ಕೂ ಹೆಚ್ಚು ಪೊಲೀಸರ ಭದ್ರತೆ ಮಾಡಲಾಗುತ್ತಿದೆ.
ಮೂರು ಪಾಳಿಯಲ್ಲಿ ಪೊಲೀಸರು ಭದ್ರತೆಯ ಕಾರ್ಯದಲ್ಲಿ ನಿರತರಾಗಿರುತ್ತಾರೆ. ಹೀಗಾಗಿ ಎಲ್ಲಾ ಪೊಲೀಸರಿಗೂ ಅಂಟಿಜೆನ್ ಟೆಸ್ಟ್ ಮಾಡಿದ ಬಳಿಕ ಸಂಪೂರ್ಣವಾಗಿ ಬದಲಾವಣೆ ಮಾಡಿ ಬೇರೆ ಕಡೆ ಕೆಲಸ ಮಾಡುತ್ತಿರುವ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಮಣಿಪಾಲ್ ಆಸ್ಪತ್ರೆಗೆ ಅಲೋಕ್ಕುಮಾರ್ ಭೇಟಿ..
ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಕೆಎಸ್ಆರ್ಪಿ ಎಡಿಜಿಪಿ ಅಲೋಕ್ಕುಮಾರ್, ಭದ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.