ಬೆಂಗಳೂರು : ಕೊರೊನಾ ಲಾಕ್ ಡೌನ್ ವಿಚಾರವಾಗಿ ಕೇಂದ್ರ, ರಾಜ್ಯ ಸರ್ಕಾರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ರಾಜ್ಯ ಕಾಂಗ್ರೆಸ್ ಸಮರ ಸಾರಿದೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಕ್ಯಾಂಪೇನ್ ನಡೆಸಲಿದ್ದಾರೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 2ರವರೆಗೆ ಈ ಕಾರ್ಯಕ್ರಮ ನಡೆಯಲಿದೆ.
ಫೇಸ್ ಬುಕ್ ಲೈವ್ ಮೂಲಕ ರಾಜ್ಯ ಕಾಂಗ್ರೆಸ್ ನಾಯಕರು ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಿದ್ದಾರೆ.
ಬಡವರು, ಮಧ್ಯಮವರ್ಗದ ಕುಟುಂಬಗಳಿಗೆ ನೆರವು. ತಲಾ 10 ಸಾವಿರ ನೇರ ನಗದು ಹಣ. ಅಸಂಘಟಿತ ಕಾರ್ಮಿಕರ ಸಮಸ್ಯೆಗಳನ್ನ ಪರಿಹರಿಸಿ. ಕಾರ್ಮಿಕರಿಗೆ ಊಟ, ತಿಂಡಿ ಸೇರಿದಂತೆ ಊರಿಗೆ ಹಿಂದಿರುಗಲು ವ್ಯವಸ್ಥೆ ಮಾಡಿ ಎಂಬ ಹತ್ತು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಕ್ಯಾಂಪೇನ್ ನಡೆಯಲಿದೆ.
ಇನ್ನು ಈ ಅಭಿಯಾನದಲ್ಲಿ ಭಾಗವಹಿಸುವಂತೆ ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದರು, ರಾಜ್ಯಸಭಾ ಸದಸ್ಯರು, ಶಾಸಕರು, ಪರಿಷತ್ ಸದಸ್ಯರು ಹಾಗೂ ಪದಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಂದ್ಹಾಗೆ ಈ ಹಿಂದೆಯೇ ಕಾಂಗ್ರೆಸ್ ನಾಯಕರು ಸಭೆ ನಡೆಸಿ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲು ನಿರ್ಧರಿಸಿದ್ದರು. ಆದರೆ, ಕೊರೊನಾ ಕಾರಣದಿಂದಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರದ ವಿರುದ್ಧ ಸಮರ ಸಾರಲು ಮುಂದಾಗಿದ್ದಾರೆ ಕಾಂಗ್ರೆಸ್ ನಾಯಕರು.