ರಾಜ್ಯದಲ್ಲಿ 6500 ಶಾಲಾ ಕಟ್ಟಡಗಳ ನಿರ್ಮಾಣ ಮಾಡಲಾಗುತ್ತಿದೆ – ಬಸವರಾಜ್ ಬೊಮ್ಮಾಯಿ…
ಬೆಂಗಳೂರು – ರಾಜ್ಯದಲ್ಲಿ 6500 ಶಾಲಾ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಈ ಮೂಲಕ ಶಿಕ್ಷಣಕ್ಕೆ ಶಕ್ತಿ ತುಂಬುವುದು ಸರ್ಕಾರದ ಸಂಕಲ್ಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮೊದಲಿಯರ್ ಸೇವಾ ಸಂಘದ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಂದೇ ವರ್ಷದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಶಾಲಾ ಕಟ್ಟಡ ನಿರ್ಮಾಣ ಮಾಡಿ ಮೂಲ ಸೌಲಭ್ಯಕ್ಕೆ ಒತ್ತು ಕೊಟ್ಟಿರುವುದು ದಾಖಲಾಗಿದೆ ಎಂದು ತಿಳಿಸಿದರು.
ಹಿಂದೆ ಯಾವ ಸರ್ಕಾರವು ಇಷ್ಟು ದೊಡ್ಡ ಪ್ರಮಾಣದಲ್ಲಿ ಮೂಲಸೌಲಭ್ಯ ಒದಗಿಸಲು ಮುಂದಾಗಿರಲಿಲ್ಲ. ಶಿಕ್ಷಣಕ್ಕೆ ಶಕ್ತಿ ತುಂಬಲು ಇಂತಹ ಕ್ರಾಂತಿಕಾರಕ ಹೆಜ್ಜೆಯನ್ನು ಇಟ್ಟಿದೆ ಎಂದರು. ನಗರದಲ್ಲಿ ಶಿಕ್ಷಣ ವ್ಯವಸ್ಥೆ ಬಹುದೊಡ್ಡ ಸಮಸ್ಸೆ ಎದುರಿಸುತ್ತಿದೆ, ಒಂದೆಡೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ ಇನ್ನೊಂದೆಡೆ ಖಾಸಗಿ ಶಾಲೆಗಳ ಶುಲ್ಕ ದುಬಾರಿಯಾಗಿದೆ ಎಂದು ತಿಳಿಸಿದರು.
ಮನುಷ್ಯ ಇತಿಹಾಸದ ಭಾಗವಾಗಬೇಕು. ಹಾಗೆಯೇ ಹೊಸ ಇತಿಹಾಸ ಸೃಷ್ಟಿಸಬೇಕು. ಅಂತಹ ಶಕ್ತಿ ಮೊದಲಿಯಾರ್ ಸಮುದಾಯದಲ್ಲಿದೆ. ನಾಡು ಕಟ್ಟುವ ಕಾರ್ಯದಲ್ಲಿ ಈ ಸಮುದಾಯದ ಮಾರ್ಗದರ್ಶನ ಹಾಗೂ ಸೇವೆ ಅಗತ್ಯವಿದ್ದು, ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದರು. ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ಹಲವು ಕಾರ್ಯಕ್ರಮಗಳನ್ನು ಸರ್ಕಾರ ತಂದಿದ್ದು, ಅವುಗಳ ಪ್ರಯೋಜನ ಪಡೆಯಬೇಕು ಎಂದು ಅವರು ಸಲಹೆ ನೀಡಿದರು.