ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲೂ ಧಾರಾಕಾರ ಮಳೆ ಸುರಿಯುತ್ತಿದೆ.
ನಿನ್ನೆ ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ಹೊತ್ತಿಗೆ ಆರಂಭವಾದ ಮಳೆ, ಮಧ್ಯರಾತ್ರಿವರೆಗೂ ಸುರಿಯಿತು. ಭಾರಿ ಮಳೆಯಿಂದಾಗಿ ನಗರದಲ್ಲಿ ಜನಜೀವನ ಅಸ್ಯವ್ಯಸ್ತವಾಗಿತ್ತು.
ಕೊಡಗಿನಲ್ಲಿ ಧಾರಾಕಾರ ಮಳೆ, ರೆಡ್ ಅಲರ್ಟ್
ಕೊಡಗು ಜಿಲ್ಲೆಯ ಬ್ರಹ್ಮಗಿರಿ ವ್ಯಾಪ್ತಿಯಲ್ಲಿ ಇಂದೂ ಸಹ ಮಳೆ ಮುಂದುವರಿದಿದೆ. ಭಾಗಮಂಡಲ, ತಲಕಾವೇರಿ ಹಾಗೂ ನಾಪೊಕ್ಲು ಭಾಗದಲ್ಲಿ ಬುಧವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಇದರಿಂದಾಗಿ ಕಾವೇರಿ ನದಿಯಲ್ಲಿ ನೀರಿನಮಟ್ಟ ಮತ್ತಷ್ಟು ಏರಿಕೆಯಾಗಿದೆ. ಮಡಿಕೇರಿ, ಗಾಳಿಬೀಡು, ಸುಂಟಿಕೊಪ್ಪ ಹಾಗೂ ಹಾರಂಗಿ ಜಲಾನಯನ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ.
ಕೊಡಗಿನಲ್ಲಿ ಮಳೆ ತೀವ್ರತೆ ಹೆಚ್ಚಾಗಿದ್ದರಿಂದ ಭೂಕುಸಿತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಆಲರ್ಟ್ ಘೋಷಣೆ ಮಾಡಲಾಗಿದೆ.
ಮಲೆನಾಡಿನಲ್ಲಿ ಜೋರು ಮಳೆ
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಶೃಂಗೇರಿ ಎನ್.ಆರ್.ಪುರ, ಕೊಪ್ಪ, ಕಳಸ, ಮೂಡಿಗೆರೆ ಭಾಗದಲ್ಲಿ ಬಿಟ್ಟುಬಿಟ್ಟು ಸಾಧಾರಣವಾಗಿ ಸುರಿಯುತ್ತಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿಕೊಂಡು ಹರಿಯುತ್ತಿವೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗುತ್ತಿದೆ. ಕಾರವಾರದ ಅಮದಳ್ಳಿಯಲ್ಲಿ ಮನೆಯೊಳಗೆ ನೀರು ನುಗ್ಗಿದೆ. ಅಂಕೋಲಾ ತಾಲ್ಲೂಕಿನ ಅವರ್ಸಾದಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದೆ. ಶಿರಸಿ ಭಾಘದಲ್ಲಿ ಸಾಧಾರಣ ಮಳೆಯಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬೆಳ್ತಂಗಡಿ ಭಾಗದಲ್ಲಿ ಮಳೆ ಜೋರಾಗಿದ್ದು, ಉಡುಪಿ ಜಿಲ್ಲೆಯ ಬೈದೂರಿನಲ್ಲಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಿದ್ದು, ಕೆಲ ಮನೆಗಳಿಗೆ ನುಗ್ಗಿದೆ. ಅಘನಾಶಿನಿ, ಗಂಗಾವಳಿ ನೇತ್ರಾವತಿ ನದಿಗಳು ಉಕ್ಕಿ ಹರಿಯುತ್ತಿವೆ.
ಶಿವಮೊಗ್ಗ ಜಿಲ್ಲೆಯ ಸಾಗರ, ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಕೆಲ ಕಡೆ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ.
ಹುಬ್ಬಳ್ಳಿಯಲ್ಲೂ ಜಿಟಿ ಜಿಟ ಮಳೆ
ಹುಬ್ಬಳ್ಳಿ ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೇಲಿಂದ ಮೇಲೆ ಕೆಲವೊಮ್ಮೆ ಜಿಟಿ ಜಿಟಿ ಹಾಗೂ ಜೋರಾಗಿ ಮಳೆ ಸುರಿಯುತ್ತಿದೆ. ಇಂದು ಬೆಳಿಗ್ಗೆ ಕೆಲ ಹೊತ್ತು ಮಳೆ ಸ್ವಲ್ಪ ಕಡಿಮೆಯಿದ್ದ ಕಾರಣ ವ್ಯಾಪಾರಿಗಳು ನಿತ್ಯದ ಕಾಯಕಕ್ಕೆ ಅಣಿಯಾದರು. ಮಳೆ ಮತ್ತೆ ಜೋರಾದ ಕಾರಣ ವ್ಯಾಪಾರಕ್ಕೆ ಅಡ್ಡಿಯುಂಟಾಗಿದೆ.