ಬೆಂಗಳೂರು: ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಮಾಜಿ ಸಿಎಂ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಪತ್ರಿಕಾ ಹೇಳಿಕೆಯೊಂದನ್ನ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ಕೊರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಪಾರದರ್ಶಕ ರೀತಿಯಲ್ಲಿ ಕ್ರಮಕೈಗೊಳ್ಳುತ್ತಿಲ್ಲ ಎಂದು ಜನರು ಅನುಮಾನ ಪಡುತ್ತಿದ್ದಾರೆ ಎಂದು ಹೇಳಿದ್ದಾರೆ..
ದಿನೇದಿನೇ ಸೊಂಕು ಹೆಚ್ಚುತ್ತಿದೆ. ನಿನ್ನೆ ಒಂದೇ ಒಂದು ಸಾವಿರ ಹತ್ತಿರ ಪ್ರಕರಣಗಳು ಬಂದಿವೆ. ಬೆಂಗಳೂರಲ್ಲೇ 600 ಕೇಸ್ ಕಂಡುಬಂದಿದೆ. ಹೀಗಾಗಿ ರಾಜ್ಯ ಸರ್ಕಾರ ತಕ್ಷಣ ಕೊರೋನಾ ವಿರುದ್ದ ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು-ವೆಚ್ಚಗಳ ಬಗ್ಗೆ ಶ್ವೇತಪತ್ರವನ್ನು ಹೊರಡಿಸಿ ಸಂಪೂರ್ಣ ವಿವರವನ್ನು ಜನತೆಯ ಮುಂದಿಡಬೇಕು. ಈ ಮೂಲಕ ಜನರಲ್ಲಿ ವಿಶ್ವಾಸವನ್ನು ತುಂಬುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆ ಎಂದು ಜನರು ಆತಂಕಗೊಂಡಿದ್ದಾರೆ. ಹಾಗಾದ್ರೆ ಹಿಂದಿನಿಂದ ಕೊರೊನಾ ನಿಯಂತ್ರಣಕ್ಕೆ ರಾಜ್ಯದ ಕೈಗೊಂಡ ಕ್ರಮವೇನು? ಅದಕ್ಕೆ ಖಜಾನೆಯಿಂದ ಎಷ್ಟು ಹಣ ಖರ್ಚಾಗಿದೆ? ಅದು ಯಾವ ಉದ್ದೇಶಗಳಿಗೆ ಹಣ ಖರ್ಚಾಗಿದೆ? ಇದರಲ್ಲಿ ಕ್ವಾರಂಟೈನ್, ಚಿಕಿತ್ಸೆ, ಪಿಪಿಇ, ವೆಂಟಿಲೇಟರ್, ಆಮ್ಲಜನಕ ಸಿಲಿಂಡರ್, ಮಾಸ್ಕ್, ಸಾನಿಟೈಸರ್ ಸೇರಿದಂತೆ ಮತ್ತಿತರ ವೈದ್ಯಕೀಯ ಸಲಕರಣೆ ಮತ್ತು ಚಿಕಿತ್ಸೆಗೆ ಖರ್ಚಾದ ಹಣ ಎಷ್ಟು? ಕೇಂದ್ರ ಸರ್ಕಾರದಿಂದ ಈವರೆಗೆ ಬಂದಿರುವ ದುಡ್ಡು ಮತ್ತು ವೈದ್ಯಕೀಯ ಸಲಕರಣೆಗಳೆಷ್ಟು? ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಹಾಸಿಗೆಗಳೆಷ್ಟು? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಸೋಂಕಿನಿಂದ ಅಸ್ಪತ್ರೆಗಳಿಗೆ ಸೇರಿರುವ ರೋಗಿಗಳಿಗೆ ಸರಿಯಾದ ಚಿಕಿತ್ಸೆ. ಊಟ ಸಿಗುತ್ತಿಲ್ಲ. ಜೊತೆಗೆ ಕಳೆದ ವಾರದಿಂದ ಸೋಂಕು ಜಾಸ್ತಿಯಾಗಿದೆ. ಸೋಂಕು ಬಂದವನಿಗೆ ಅಸ್ಪತ್ರೆಗಳು ಸಿಗದೆ ಇರೋ ಪರಿಸ್ಥಿತಿ ಇದೆ. ಜನರು ಖಾಸಗಿ ಅಸ್ಪತ್ರೆಗಳಿಗೆ ಹೋಗುತ್ತಿದ್ದಾರೆ. ಬೆಂಗಳೂರು ಮತ್ತು ಕೆಲವು ಜಿಲ್ಲಾ ಕೇಂದ್ರಗಳಿಗೆ ಸೀಮಿತವಾಗಿದ್ದ ಕೊರೊನಾ ಸೋಂಕು ಈಗ ಹಳ್ಳಿ-ಊರುಗಳೆನ್ನದೆ ವ್ಯಾಪಕವಾಗಿ ಹರಡಿದೆ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.