ಬೆಂಗಳೂರಿಗೆ ವಾಪಸ್ ಬರುವವರಿಗೆ ಕೊರೊನಾ ಟೆಸ್ಟ್ ಕಡ್ಡಾಯ : ಬಿಎಸ್ವೈ
ಬೆಂಗಳೂರು : ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿರುವುದರಿಂದ ಬೆಂಗಳೂರಿನತ್ತ ಜನರು ಮತ್ತೆ ಆಗಮಿಸುತ್ತಿದ್ದಾರೆ. ಇದರಿಂದ ಸೋಂಕಿನ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರಿಗೆ ವಾಪಸ್ ಆಗುವ ಜನರಿಗೆ ಕೊರೊನಾ ಟೆಸ್ಟ್ ಕಡ್ಡಾಯ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.
ನಗರದ ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅನ್ಲಾಕ್ ಬಳಿಕ ಬೆಂಗಳೂರಿಗೆ ಬರುವವರ ಸಂಖ್ಯೆ ಹೆಚ್ಚಳವಾಗಲಿದೆ.
ಸೋಂಕು ಹರಡುವ ಸಾಧ್ಯತೆ ಕೂಡ ಇದೆ. ಹೀಗಾಗಿ, ನಾನು ಅಧಿಕಾರಿಗಳ ಜೊತೆ ಮಾತನಾಡಿ ಬೆಂಗಳೂರಿಗೆ ಬರುವವರಿಗೆ ಕಠಿಣ ಪರೀಕ್ಷೆ ಮಾಡಲು ಸೂಚಿಸುತ್ತೇನೆ. ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಜಿಲ್ಲೆಗಳ ಪ್ರವಾಸದ ಬಗ್ಗೆ ಮಾತನಾಡಿ, ಹಾಸನ, ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯದ ಬಗ್ಗೆ ಪರಿಶೀಲನೆ ಮಾಡಿ ಬಂದಿದ್ದೇನೆ.
ವಾರದಲ್ಲಿ ಒಮ್ಮೆಯಾದರೂ ಜಿಲ್ಲೆಗಳಿಗೆ ತೆರಳಿ ಕೋವಿಡ್ ನಿರ್ವಹಣೆ, ಅಭಿವೃದ್ಧಿ ಕಾರ್ಯದ ಪರಿಶೀಲನೆ ನಡೆಸುತ್ತೇನೆ. ಇದರಿಂದ ಜಿಲ್ಲೆಗಳಲ್ಲಿನ ವಾಸ್ತವ ಸ್ಥಿತಿ ತಿಳಿಯಲು ಅವಕಾಶವಾಗಲಿದೆ ಎಂದರು.