“ರಾಜ್ಯದಲ್ಲಿ ವಾರಕ್ಕಾಗುವಷ್ಟು ಮಾತ್ರ ಔಷಧಿ ಇದೆ”
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ತಾಂಡವ ಮುಂದುವರೆದಿದ್ದು, ಸೂಕ್ತ ವ್ಯವಸ್ಥೆ ಇಲ್ಲದೇ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಕೇವಲ ಒಂದು ವಾರಕ್ಕಾಗುವಷ್ಟು ಮಾತ್ರ ಕೋವಿಡ್ ಚಿಕಿತ್ಸೆಗೆ ಬಳಕೆ ಮಾಡಲಾಗುವ ರೆಮಿಡಿಸಿವಿರ್ ಸೇರಿದಂತೆ ಇತರ ಔಷಧಿಗಳು ಇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆತಂಕ ವ್ಯಕ್ತ ಪಡಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಇಂದು ಚಾಮರಾಜನಗರ ಜಿಲ್ಲೆಯ ಪ್ರವಾಸಕ್ಕೆ ತೆರಳಿದ್ರು. ಇದಕ್ಕು ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರೆಮಿಡಿಸಿವಿರ್ ಸೇರಿದಂತೆ ಇತರ ಜೀವರಕ್ಷಕ ಸಾಧನಗಳು ಏಳು-ಎಂಟು ದಿನಗಳಿಗೆ ಸಾಕಾಗುವಷ್ಟಿದೆ, ಅನಂತರ ಏನು ಮಾಡುವುದು ಎಂದು ಪ್ರಶ್ನಿಸಿದರು.
ಆಕ್ಸಿಜನ್ ಇಲ್ಲದೇ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಮಧ್ಯೆ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಕೇಂದ್ರ ಸರ್ಕಾರ ತನ್ನ ವಶಕ್ಕೆ ಪಡೆದುಕೊಂಡಿದೆ. ರಾಜ್ಯ ಸರ್ಕಾರ 1750 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸುವಂತೆ ಬೇಡಿಕೆ ಸಲ್ಲಿಸಿದ್ರೆ ಕೇಂದ್ರ ಸರ್ಕಾರ 850 ಮೆಟ್ರಿಕ್ ಟನ್ ಮಂಜೂರು ಮಾಡಿದೆ. ಕೇಂದ್ರ ಸರ್ಕಾರ ಬೇಡಿಕೆಯಷ್ಟು ಆಮ್ಲಜನಕ ಪೂರೈಕೆ ಮಾಡುತ್ತಿಲ್ಲ ಎಂದು ಆರೋಪ ಮಾಡಿದರು.
ಇನ್ನು ಜೀವ ರಕ್ಷಕ ಸಾಧನಗಳನ್ನೂ ಪೂರೈಸುವಂತೆ ಬೇಡಿಕೆ ಸಲ್ಲಿಸಿದರೆ ಅವುಗಳ ಉತ್ಪಾದನೆ ಮತ್ತು ಪೂರೈಕೆಗೆ ಕನಿಷ್ಠ 15ರಿಂದ 30 ದಿನ ಕಾಲಾವಕಾಶ ಬೇಕು. ಹೀಗಾಗಿ ಜನರು ತಮ್ಮ ಎಚ್ಚರಿಕೆಯಲ್ಲಿ ತಾವಿರಬೇಕು. ಸೋಂಕಿನಿಂದ ರಕ್ಷಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.