ಬಿಎಸ್ ವೈ, ಡಿಕೆಶಿ ವಿರುದ್ಧ ಭ್ರಷ್ಟಾಚಾರದ ಕೇಸ್ ದಾಖಲಿಸಿದ ಆಲಂ ಪಾಷಾ
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ 13 ರಾಜಕಾರಣಿಗಳ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ ಎಸಿಬಿಗೆ ದೂರು ಸಲ್ಲಿಸಿದ್ದಾರೆ. ಇನ್ನೂ ಕಾಂಗ್ರೆಸ್ ಅವರೇ ಆದ ವಿ.ಎಸ್ ಉಗ್ರಪ್ಪ ಹಾಗೂ ಸಲೀಂ ಅವರು ಡಿಕೆಶಿ ಬಗ್ಗೆ ನಡೆಸಿದ ‘ಕಲೆಕ್ಷನ್ ಗಿರಾಕಿ’ ಸಂಭಾಷಣೆಯನ್ನ ಆಧಾರವಾಗಿಟ್ಟುಕೊಂಡು ಎಸಿಬಿಗೆ ದೂರು ನೀಡಲಾಗಿದೆ.
ಇನ್ನೂ ಡಿಕೆಶಿ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಗೊತ್ತಿದೆ. ನೀರಾವರಿ ಹಾಗೂ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದಾಗ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ಇದೀಗ 8ರಿಂದ 12 ಪರ್ಸೆಂಟ್ ಕಮಿಷನ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದೆಲ್ಲಾ ಗೊತ್ತಿದ್ದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿರುವ ರಾಹುಲ್ ಗಾಂಧಿ ವಿರುದ್ಧವೂ ದೂರು ನೀಡಲಾಗಿದೆ. ಇನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ನೀರಾವರಿ ಇಲಾಖೆಯಲ್ಲಿ ಲಂಚ ಪಡೆದು ಗುತ್ತಿಗೆದಾರರಿಗೆ ಸಾವಿರಾರು ಕೋಟಿ ಬಿಡುಗಡೆ ಮಾಡಿರುವ ಆರೋಪವಿದೆ.