ಬೆಂಗಳೂರು : ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ದಿನ ದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ಪ್ರಾರಂಭದಿಂದಲೂ ವೈದ್ಯರು, ಆಶಾ ಕಾರ್ಯಕರ್ತೆಯರು, ಪೊಲೀಸರು, ಪತ್ರಕರ್ತರು ಸೇರಿದಂತೆ ಅನೇಕ ಜನ ಕೊರೊನಾ ವಿರುದ್ಧ ಹೋರಾಟದಲ್ಲಿ ಭಾಗಿಯಾಗಿದ್ದಾರೆ.
ಕೊರೊನಾ ವಿರುದ್ದ ಹೋರಾಟದಲ್ಲಿ ಪ್ರಾಣದ ಹಂಗು ತೊರೆದು ಭಾಗಿದ್ದವರನ್ನು ಸರ್ಕಾರ ಕೊರೊನಾ ವಾರಿಯರ್ಸ್ ಎಂದು ಕರೆದಿತ್ತು. ಜೊತೆಗೆ ಕೊರೊನಾ ವಾರಿಯರ್ಸ್ ಗೆ ವಿಮೆ ಸರ್ಕಾರ ಮಾಡಿದೆ. ಆದರೆ ವಿಮೆ ಗೆ ಪತ್ರಕರ್ತರು ಒಳಪಟ್ಟಿಲ್ಲ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೊರೊನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ. ಕಾರ್ಯನಿರತ ಪತ್ರಕರ್ತರನ್ನು (ದೃಶ್ಯ ಮತ್ತು ಮುದ್ರಣ) ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು. ಕೊರೊನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯಸರ್ಕಾರ ತಕ್ಷಣವೇ ನಿರ್ಧಾರ ಕೈಗೊಳ್ಳಲಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.