ಹಾವೇರಿ : ಕೊರೊನಾ ವೈರಸ್ ವಿಚಾರದಲ್ಲಿ ಕಾಂಗ್ರೆಸ್ ಮುಖಂಡರು ಮಾಡುತ್ತಿರುವ ಆರೋಪ ನಿರಾಧಾರ ಮತ್ತು ರಾಜಕೀಯ ಪ್ರೇರಿತ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕೂಡಲದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಆರೋಪಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ,ಸರ್ಕಾರದ ಸಾಧನೆಯನ್ನು ಕಾಂಗ್ರೆಸ್ ನಾಯಕರಿಗೆ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಈಗಾಗಲೇ ಪ್ರತಿಪಕ್ಷದ ನಾಯಕರಿಗೆ ಕೋವಿಡ್ ಲೆಕ್ಕ ನೀಡಿದ್ದೇವೆ. ಹೀಗಾಗಿ ಶ್ವೇತಪತ್ರ ಹೊರಡಿಸುವ ಅಗತ್ಯತೆ ಇಲ್ಲ ಎಂದು ಹೇಳಿದರು.
ಇದೇ ವೇಳೆ ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟ ಬಗ್ಗೆ ಮಾತನಾಡಿದ ಗೃಹಸಚಿವ, ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳು ಕೊರೊನಾಪೀಡಿತ ಪೊಲೀಸರ ಸಂಖ್ಯೆ ಕಡಿಮೆಯಾಗಿದೆ. ಪೊಲೀಸ್ ಸಿಬ್ಬಂದಿ ಸೇರಿದಂತೆ ಅವರ ಕುಟುಂಬಕ್ಕೆ ಸುರಕ್ಷತೆಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿರುವುದಾಗಿ ತಿಳಿಸಿದರು.








