ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ ಸಾರಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ.
ಡಿ.ಕೆ. ಶಿವಕುಮಾರ್ ಅಂದ್ರೆ ಟೆಂಡರ್ ಸಿಎಂ
ನಗರದ ಜೆ.ಕೆ. ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಆರ್ ಅಶೋಕ್, ಡಿ.ಕೆ. ಶಿವಕುಮಾರ್ ಅವರನ್ನು ಟೆಂಡರ್ ಸಿಎಂ ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಸೈಟ್ ಮಾಡಿಕೊಳ್ಳುವುದನ್ನೇ ಸಾಧನೆ ಎಂದು ಭಾವಿಸಿದ್ದರೆ, ಡಿ.ಕೆ. ಶಿವಕುಮಾರ್ ಅವರು ಅಧಿಕಾರಕ್ಕೆ ಬಂದಾಗಿನಿಂದ ಕೇವಲ ಟೆಂಡರ್ ಪ್ರಕ್ರಿಯೆಗಳಲ್ಲೇ ಮುಳುಗಿದ್ದಾರೆ. ಸಿದ್ದರಾಮಯ್ಯ ಅವರ ನಂತರ ಟೆಂಡರ್ ಪ್ರಭಾವದ ಮೂಲಕವೇ ಅವರು ಈ ಸ್ಥಾನಕ್ಕೆ ಬಂದಿದ್ದಾರೆ ಎಂದು ಟೀಕಿಸಿದರು.
ಬೆಂಗಳೂರಿನ ಕಸ ವಿಲೇವಾರಿ, 40 ಸಾವಿರ ಕೋಟಿ ರೂಪಾಯಿ ವೆಚ್ಚದ ಟನಲ್ ರಸ್ತೆ ಯೋಜನೆ ಮತ್ತು ಬಿಡದಿ ಟೌನ್ಶಿಪ್ ಸೇರಿದಂತೆ ಮುಂದಿನ 30 ರಿಂದ 40 ವರ್ಷಗಳಲ್ಲಿ ಮಾಡಬಹುದಾದ ಎಲ್ಲಾ ಕೆಲಸಗಳಿಗೂ ಈಗಲೇ ಟೆಂಡರ್ ಕರೆದಿದ್ದಾರೆ. ರಾಹುಲ್ ಗಾಂಧಿ ಅವರು ಹಾಕಿದ ಟೆಂಡರ್ ಅನ್ನು ಡಿ.ಕೆ. ಶಿವಕುಮಾರ್ ಖರೀದಿ ಮಾಡುತ್ತಿದ್ದಾರೆ. ಈ ಹಿಂದೆ 40 ಪರ್ಸೆಂಟ್ ಸರ್ಕಾರ ಎಂದು ಆರೋಪಿಸುತ್ತಿದ್ದ ಕಾಂಗ್ರೆಸ್ ಈಗ 60 ಪರ್ಸೆಂಟ್ ಸರ್ಕಾರ ನಡೆಸುತ್ತಿದೆ ಎಂದು ಅಶೋಕ್ ಕಿಡಿಕಾರಿದರು.
ಅಕ್ರಮ ವಲಸಿಗರಿಗೆ ಮಣೆ: ಪಿಆರ್ಸಿ ಆದೇಶಕ್ಕೆ ಆಕ್ರೋಶ
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್ಸಿ) ಆದೇಶದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪೌರತ್ವ ಅಥವಾ ಶಾಶ್ವತ ನಿವಾಸದ ಬಗ್ಗೆ ತೀರ್ಮಾನಿಸುವ ಹಕ್ಕು ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ರಾಜ್ಯ ಸರ್ಕಾರಕ್ಕೆ ಈ ಅಧಿಕಾರ ಕೊಟ್ಟವರು ಯಾರು? ಬಾಂಗ್ಲಾದೇಶದ ಅಕ್ರಮ ವಲಸಿಗರಿಗೆ ಮತದಾನದ ಹಕ್ಕು ಕೊಡಿಸಲು ಈ ಸಂಚು ರೂಪಿಸಲಾಗಿದೆ. ರಾಜ್ಯದ ಭದ್ರತೆಗೆ ಧಕ್ಕೆ ತರುವ ಈ ಸಂವಿಧಾನ ವಿರೋಧಿ ಆದೇಶವನ್ನು ತಕ್ಷಣವೇ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.
ತೋರಿಕೆಯ ಹಿಂದುತ್ವ ಮತ್ತು ಅಲ್ಪಸಂಖ್ಯಾತರ ಓಲೈಕೆ
ಡಿ.ಕೆ. ಶಿವಕುಮಾರ್ ಅವರ ಭಕ್ತಿ ಕೇವಲ ಪ್ರದರ್ಶನಕ್ಕಾಗಿ ಮಾತ್ರ. ಬೆಳಗ್ಗೆ ಎದ್ದ ಕೂಡಲೇ ದೇವಸ್ಥಾನಕ್ಕೆ ಹೋಗುವುದು, ವಿಭೂತಿ ಧರಿಸುವುದು ಅವರ ತೋರಿಕೆಯ ಹಿಂದುತ್ವವಾಗಿದೆ. ಅತಿಯಾದ ಅಲ್ಪಸಂಖ್ಯಾತರ ಓಲೈಕೆಯಿಂದಾಗಿ ರಾಜ್ಯದಲ್ಲಿ ಹಿಂದೂಗಳ ಮಾರಣಹೋಮ ನಡೆಯುತ್ತಿದೆ. ಅಕ್ರಮ ವಲಸಿಗರಿಂದ ಏನಾದರೂ ಅನಾಹುತ ಅಥವಾ ಬಾಂಬ್ ಸ್ಫೋಟದಂತಹ ಘಟನೆಗಳು ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಎಚ್ಚರಿಸಿದರು.
ಮೋದಿ ಅವರ ಜಾತಿ ನೋಡಿ ಕಾಂಗ್ರೆಸ್ ವಿರೋಧಿಸುತ್ತಿದೆ
ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯಂತ ಹಿಂದುಳಿದ ಸಮುದಾಯದಿಂದ ಬಂದು ದೇಶದ ನಾಯಕರಾಗಿರುವುದನ್ನು ಕಾಂಗ್ರೆಸ್ಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರ ಜಾತಿಯ ಕಾರಣಕ್ಕಾಗಿಯೇ ಕಾಂಗ್ರೆಸ್ ನಾಯಕರು ಮೋದಿ ಅವರನ್ನು ವಿರೋಧಿಸುತ್ತಿದ್ದಾರೆ. ರಾಜ್ಯದಲ್ಲಿರುವ ನಾಲಾಯಕ್ ಕಾಂಗ್ರೆಸ್ ಸರ್ಕಾರಕ್ಕೆ ಅಹಿಂದ ವರ್ಗಗಳ ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅಶೋಕ್ ವಾಗ್ದಾಳಿ ನಡೆಸಿದರು.








