ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಒಳಾಂಗಣದಲ್ಲಿ ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆಯ ಹಗ್ಗಜಗ್ಗಾಟ ತಾರಕಕ್ಕೇರಿದೆ. ಬೆಳಗಾವಿ ಅಧಿವೇಶನ ಮುಗಿಯುತ್ತಿದ್ದಂತೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿರುವ ಹೇಳಿಕೆಯೊಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಕುರ್ಚಿ ಬದಲಾವಣೆಯ ಚರ್ಚೆಗೆ ಮತ್ತೆ ಜೀವ ತುಂಬಿದೆ. ಕಾಂಗ್ರೆಸ್ ಹೈಕಮಾಂಡ್ನಿಂದ ಪ್ರಮುಖ ಕರೆಯೊಂದು ಬಂದಿದ್ದು, ತಮಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೆಹಲಿಗೆ ಬರುವಂತೆ ಸೂಚನೆ ನೀಡಲಾಗಿದೆ ಎಂದು ಡಿಕೆಶಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಅಧಿಕಾರ ಹಂಚಿಕೆ ಮತ್ತು ದೆಹಲಿ ಭೇಟಿಯ ಬಗ್ಗೆ ಮಹತ್ವದ ಸುಳಿವು ನೀಡಿದ್ದಾರೆ. ಹೈಕಮಾಂಡ್ ನಾಯಕರು ದೆಹಲಿಯಿಂದ ನಮಿಬ್ಬರಿಗೂ ಕರೆ ಮಾಡಿ, ಏನೋ ಹೇಳಿದ್ದಾರೆ. ಯಾವಾಗ ದೆಹಲಿಗೆ ಬರಬೇಕು ಎನ್ನುವುದನ್ನು ತಿಳಿಸಿದ್ದಾರೆ. ನಾನು ಮತ್ತು ಮುಖ್ಯಮಂತ್ರಿಯವರು ಆ ವೇಳೆಗೆ ವರಿಷ್ಠರನ್ನು ಭೇಟಿ ಮಾಡಲಿದ್ದೇವೆ. ನಾನಂತೂ ಕದ್ದು ಮುಚ್ಚಿ ದೆಹಲಿಗೆ ಹೋಗುವುದಿಲ್ಲ, ಎಲ್ಲರಿಗೂ ಹೇಳಿಯೇ ಹೋಗುತ್ತೇನೆ ಎಂದು ಡಿಕೆಶಿ ಮಾರ್ಮಿಕವಾಗಿ ನುಡಿದಿದ್ದಾರೆ. ಹೈಕಮಾಂಡ್ ನಾಯಕರು ನಿಖರವಾಗಿ ಏನು ಹೇಳಿದ್ದಾರೆ ಎಂಬ ಗುಟ್ಟನ್ನು ಡಿಕೆಶಿ ರಟ್ಟು ಮಾಡದಿದ್ದರೂ, ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ.
ಸಿದ್ದರಾಮಯ್ಯ ವರ್ಸಸ್ ಡಿಕೆಶಿ: ಭಿನ್ನ ರಾಗ
ಇತ್ತೀಚೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಹುದ್ದೆ ಎರಡೂವರೆ ವರ್ಷಕ್ಕೆ ಹಂಚಿಕೆಯಾಗಿದೆ ಎಂದು ಎಲ್ಲಿಯೂ ತೀರ್ಮಾನವಾಗಿಲ್ಲ. ಹೈಕಮಾಂಡ್ ಸಂಪೂರ್ಣವಾಗಿ ನನ್ನ ಪರವಾಗಿದೆ. ವರಿಷ್ಠರು ಬಯಸಿದರೆ ಮುಂದಿನ ಅವಧಿಗೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ, ಸಿದ್ದರಾಮಯ್ಯ ಅವರ ಈ ಹೇಳಿಕೆಯ ಬೆನ್ನಲ್ಲೇ ಡಿಕೆಶಿ ಅವರು ಹೈಕಮಾಂಡ್ ಬುಲಾವ್ ಬಗ್ಗೆ ಪ್ರಸ್ತಾಪಿಸಿರುವುದು ಉಭಯ ನಾಯಕರ ನಡುವಿನ ಶೀತಲ ಸಮರವನ್ನು ಜಗಜ್ಜಾಹೀರು ಮಾಡಿದೆ.
ಕಳೆದ ತಿಂಗಳು ರಾಮನಗರದಲ್ಲಿ ಮಾತನಾಡಿದ್ದ ಡಿಕೆಶಿ, ಅಧಿಕಾರ ಹಂಚಿಕೆಗೆ ಸಂಬಂಧಪಟ್ಟಂತೆ ದೆಹಲಿಯಲ್ಲಿ ನಮ್ಮ ಐದಾರು ಮಂದಿ ನಡುವೆ ನಡೆದಿರುವ ಒಪ್ಪಂದವನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಲು ತಾವು ಇಚ್ಛಿಸುವುದಿಲ್ಲ ಎಂದಿದ್ದರು. ಆದರೆ ಸಿದ್ದರಾಮಯ್ಯ ಯಾವುದೇ ಒಪ್ಪಂದವಾಗಿಲ್ಲ ಎಂದು ಹೇಳುತ್ತಿರುವುದು ಗೊಂದಲಕ್ಕೆ ಕಾರಣವಾಗಿದೆ.
ತುಪ್ಪ ಸುರಿದ ಡಿ.ಕೆ. ಸುರೇಶ್ ಹೇಳಿಕೆ
ಈ ಮಧ್ಯೆ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಹೇಳುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದರು. ಅಧಿಕಾರ ಹಂಚಿಕೆಯ ಒಪ್ಪಂದವನ್ನು ಪಾಲಿಸಬೇಕು ಎಂಬ ಧ್ವನಿ ಡಿಕೆಶಿ ಪಾಳಯದಿಂದ ಬಲವಾಗಿ ಕೇಳಿಬರುತ್ತಿದೆ. ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸಿ ಕೆಲ ಶಾಸಕರು ಈಗಾಗಲೇ ದೆಹಲಿಗೆ ತೆರಳಿ ನಾಯಕತ್ವ ಬದಲಾವಣೆಗೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.
ಸಂಕ್ರಾಂತಿ ಡೆಡ್ಲೈನ್ ಮತ್ತು 2028ರ ಲೆಕ್ಕಾಚಾರ
ಡಿಕೆ ಶಿವಕುಮಾರ್ ಬಣದ ನಾಯಕರು ಮುಂಬರುವ ಸಂಕ್ರಾಂತಿ ಹಬ್ಬದ ವೇಳೆಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ, ಡಿಕೆಶಿ ಸಿಎಂ ಆಗಲಿದ್ದಾರೆ ಎಂದು ಎದೆತಟ್ಟಿ ಹೇಳುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಅವರ ಆಪ್ತ ಬಳಗವು ನಾಯಕತ್ವ ಅಬಾಧಿತವಾಗಿದ್ದು, 2028ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರಲಿದ್ದಾರೆ ಎಂದು ವಾದಿಸುತ್ತಿದೆ. ಎಲ್ಲವೂ ಸರಿ ಇದೆ ಎಂದು ನಾಯಕರು ಹೊರಗೆ ಹೇಳಿಕೊಳ್ಳುತ್ತಿದ್ದರೂ, ಒಳಗೆ ನಡೆಯುತ್ತಿರುವ ಬೆಳವಣಿಗೆಗಳು ಶಾಸಕರು ಮತ್ತು ಕಾರ್ಯಕರ್ತರಲ್ಲಿ ತೀವ್ರ ಗೊಂದಲ ಮೂಡಿಸಿವೆ.
ಪ್ರಸ್ತುತ ಸನ್ನಿವೇಶದಲ್ಲಿ ಆಡಳಿತ ಯಂತ್ರದ ಮೇಲೂ ಈ ರಾಜಕೀಯ ಅಸ್ಥಿರತೆ ಪರಿಣಾಮ ಬೀರುತ್ತಿದೆ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಹೈಕಮಾಂಡ್, ಈ ಹಿಂದೆಯೇ ಇಬ್ಬರೂ ನಾಯಕರಿಗೆ ಒಟ್ಟಿಗೆ ಕುಳಿತು ಉಪಾಹಾರ ಸೇವಿಸಿ ಒಗ್ಗಟ್ಟು ಪ್ರದರ್ಶಿಸಲು ತಾಕೀತು ಮಾಡಿತ್ತು. ಆದರೆ ಈಗ ಮತ್ತೆ ಪ್ರತ್ಯೇಕ ಹೇಳಿಕೆಗಳು ಬರುತ್ತಿರುವುದರಿಂದ, ಮುಂದಿನ ದೆಹಲಿ ಭೇಟಿ ನಿರ್ಣಾಯಕವಾಗಲಿದೆ. ಹೈಕಮಾಂಡ್ ನಾಯಕರು ಇಬ್ಬರನ್ನೂ ಒಟ್ಟಿಗೆ ಕೂರಿಸಿ ಅಧಿಕಾರ ಹಂಚಿಕೆಯ ಗೊಂದಲಕ್ಕೆ ಅಂತಿಮ ತೆರೆ ಎಳೆಯುತ್ತಾರೆಯೇ ಅಥವಾ ಯಥಾಸ್ಥಿತಿ ಮುಂದುವರಿಯಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.








