ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ. ಹಾವೇರಿಯಲ್ಲಿ ನಡೆದ ಬೃಹತ್ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಬಾರಿ ತಾನು ಹೇಳುವ ಸಂಖ್ಯೆಯನ್ನು ಬರೆದಿಟ್ಟುಕೊಳ್ಳಿ ಎಂದು ವಿರೋಧ ಪಕ್ಷಗಳಿಗೆ ಸವಾಲು ಹಾಕಿದ್ದಾರೆ.
ಈ ಹಿಂದೆ 2023ರ ಚುನಾವಣಾ ಸಮಯದಲ್ಲಿಯೂ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಗೆಲ್ಲುವ ಸ್ಥಾನಗಳ ಬಗ್ಗೆ ನಿಖರ ಭವಿಷ್ಯ ನುಡಿದಿದ್ದರು ಮತ್ತು ಅದು ನಿಜವಾಗಿತ್ತು. ಇದೀಗ ಅದೇ ಆತ್ಮವಿಶ್ವಾಸದಲ್ಲಿ ಮುಂದಿನ ಚುನಾವಣೆಯ ಲೆಕ್ಕಾಚಾರವನ್ನೂ ಮುಂದಿಟ್ಟಿದ್ದಾರೆ.
136 ರಿಂದ 141ಕ್ಕೆ ಏರಲಿರುವ ಸಂಖ್ಯಾಬಲ
ಈ ಬಾರಿಯ ಚುನಾವಣೆಯಲ್ಲಿ ನಮಗೆ ಜನರು 136 ಸ್ಥಾನಗಳನ್ನು ನೀಡಿ ಆಶೀರ್ವದಿಸಿದ್ದರು. ನಮ್ಮ ಸರ್ಕಾರ ಮತ್ತು ಶಾಸಕರ ಕೆಲಸದ ಮೇಲೆ ನನಗೆ ನಂಬಿಕೆಯಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ನಮ್ಮ ಸಂಖ್ಯಾಬಲ 141ಕ್ಕೆ ಏರಿಕೆಯಾಗಲಿದೆ. ನನ್ನ ಈ ಮಾತನ್ನು ಇಂದೇ ಬರೆದಿಟ್ಟುಕೊಳ್ಳಿ ಎಂದು ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದರು. ಇತ್ತೀಚೆಗೆ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಎರಡು ಕಡೆ ಮಾಜಿ ಮುಖ್ಯಮಂತ್ರಿಗಳ ಪುತ್ರರು ಸ್ಪರ್ಧಿಸಿದ್ದರೂ, ಆ ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲುವ ಮೂಲಕ ನಮ್ಮ ಬಲವನ್ನು 139ಕ್ಕೆ ಏರಿಸಿದ್ದೀರಿ ಎಂದು ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
7ನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ಘೋಷಣೆ
ಈಗಾಗಲೇ ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿರುವ ಕಾಂಗ್ರೆಸ್ ಸರ್ಕಾರ, ಇದೀಗ 6ನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿಯನ್ನು ನೀಡುತ್ತಿದೆ. ಇದರ ಜೊತೆಗೆ ರಾಜ್ಯದ ನೀರಾವರಿ ಯೋಜನೆಗಳಾದ ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಮತ್ತು ಎತ್ತಿನಹೊಳೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದರೆ, ರಾಜ್ಯದ ರೈತರಿಗೆ 7ನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದರು.
ರೈತರಿಗೆ ಬಂಪರ್ ಪರಿಹಾರ ಮತ್ತು ಕಾನೂನು ಹೋರಾಟದಲ್ಲಿ ಜಯ
ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ಎಕರೆಗೆ 35 ರಿಂದ 40 ಲಕ್ಷ ರೂಪಾಯಿ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಇನ್ನು ಕಾವೇರಿ ವಿಚಾರದಲ್ಲಿ ತಮಿಳುನಾಡು ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಹಾದಿ ಸುಗಮವಾಗಿದೆ. ಸದ್ಯ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಮಹದಾಯಿ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಕೇಂದ್ರ ಸರ್ಕಾರ ಮುಂದಿನ ಮೂರು ತಿಂಗಳಲ್ಲಿ ಅನುಮತಿ ನೀಡಿದರೆ ಚಿಕ್ಕಬಳ್ಳಾಪುರ ಮತ್ತು ಕೋಲಾರಕ್ಕೂ ನೀರು ಹರಿಸಲು ಸರ್ಕಾರ ಸಿದ್ಧವಿದೆ ಎಂದು ಭರವಸೆ ನೀಡಿದರು.
ಭಾವನೆಗಳ ರಾಜಕಾರಣ vs ಬದುಕಿನ ರಾಜಕಾರಣ
ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಡಿಸಿಎಂ, ಬಿಜೆಪಿ ಕೇವಲ ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಿದೆ. ಆದರೆ ಕಾಂಗ್ರೆಸ್ ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದೆ. ದೇವರು ಮತ್ತು ಧರ್ಮ ಕೇವಲ ಬಿಜೆಪಿಯ ಆಸ್ತಿಯಲ್ಲ, ಅದು ದೇಶದ ಪ್ರತಿಯೊಬ್ಬರ ಆಸ್ತಿ. ರಾಜಕಾರಣದಲ್ಲಿ ಧರ್ಮ ಇರಬೇಕೆ ಹೊರತು, ಧರ್ಮದಲ್ಲಿ ರಾಜಕಾರಣ ಬೆರೆಸಬಾರದು ಎಂದು ಚಾಟಿ ಬೀಸಿದರು.
ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ಮಾಡಿ ಸಾಯಿಸಿದೆ. ಮಹಾತ್ಮ ಗಾಂಧಿಯವರ ಫೋಟೋ ಮತ್ತು ಹೆಸರನ್ನು ತೆಗೆದು ಹಾಕಿರುವ ನೀವು, ಗ್ರಾಮೀಣ ಜನರಿಗೆ ಇಂತಹ ಮಹತ್ವಾಕಾಂಕ್ಷಿ ಯೋಜನೆಯನ್ನು ಮತ್ತೆ ನೀಡಲು ಸಾಧ್ಯವೇ ಎಂದು ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ಸಂಸದರನ್ನು ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.







