ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆಗಳು ಮತ್ತು ರಹಸ್ಯ ಅಂತ್ಯಕ್ರಿಯೆಗಳ ಆರೋಪದ ಕುರಿತು ತನಿಖೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆಗೆ ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಹಲವು ವರ್ಷಗಳಿಂದ ಈ ಭಾಗದಲ್ಲಿ ವರದಿಯಾಗಿದ್ದ ಅಸಹಜ ಸಾವುಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದ್ದ ಒತ್ತಡಕ್ಕೆ ಸರ್ಕಾರ ಸ್ಪಂದಿಸಿದೆ.
ಎಸ್ಐಟಿ ನೇತೃತ್ವ ಪ್ರಣವ್ ಮೊಹಂತಿ ವಹಿಸಲಿದ್ದಾರೆ
ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ಈ ಎಸ್ಐಟಿಗೆ ಪ್ರಣವ್ ಮೊಹಂತಿ ಅವರು ನೇತೃತ್ವ ವಹಿಸಲಿದ್ದಾರೆ. ಈ ತಂಡವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸಲಿದ್ದು, ತನಿಖೆಗೆ ಅಗತ್ಯವಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒದಗಿಸಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಪ್ರಕರಣದ ಹಿನ್ನೆಲೆ ಮತ್ತು ತನಿಖೆಯ ವ್ಯಾಪ್ತಿ
ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಕೆಲವು ದಶಕಗಳಿಂದ ನಡೆದಿರುವ ಅಸಹಜ ಸಾವುಗಳ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದವು. ನಿರ್ದಿಷ್ಟವಾಗಿ, ಧರ್ಮಸ್ಥಳ ದೇಗುಲದಲ್ಲಿ ಸ್ವಚ್ಛತಾ ಕಾರ್ಯ ಮಾಡುತ್ತಿದ್ದ ವ್ಯಕ್ತಿಯೊಬ್ಬರು ತಾನು ನೂರಾರು ಅಪರಿಚಿತ ಶವಗಳನ್ನು ಅರಣ್ಯ ಪ್ರದೇಶಗಳಲ್ಲಿ ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದು, ಪ್ರಕರಣಕ್ಕೆ ಹೊಸ ತಿರುವು ನೀಡಿದೆ.
ಶನಿವಾರ ಹೊರಡಿಸಲಾದ ಸರ್ಕಾರಿ ಆದೇಶದಲ್ಲಿ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಾಖಲಾಗಿರುವ ಮತ್ತು “ಕರ್ನಾಟಕದಾದ್ಯಂತ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ/ದಾಖಲಾಗಲಿರುವ ಎಲ್ಲಾ ಇತರ ಕ್ರಿಮಿನಲ್ ಪ್ರಕರಣಗಳನ್ನು” ತನಿಖೆ ಮಾಡಲು ಈ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ತಿಳಿಸಲಾಗಿದೆ.
ವಕೀಲರ ನಿಯೋಗದಿಂದ ಸಿಎಂಗೆ ಮನವಿ
ಈ ಪ್ರಕರಣದ ಗಂಭೀರತೆಯನ್ನು ಮನಗಂಡ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಸೇರಿದಂತೆ ಅನೇಕ ವಕೀಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದರು. ಧರ್ಮಸ್ಥಳದಲ್ಲಿ ನಡೆದಿರುವ ಸರಣಿ ಕೊಲೆ ಹಾಗೂ ಮೃತದೇಹಗಳ ಗೌಪ್ಯ ಅಂತ್ಯಕ್ರಿಯೆಯ ಆರೋಪಗಳ ಕುರಿತು ಸಮಗ್ರ ತನಿಖೆಗೆ ಎಸ್ಐಟಿ ರಚಿಸುವಂತೆ ಈ ನಿಯೋಗ ಒತ್ತಾಯಿಸಿತ್ತು. ಈ ಮನವಿಗೆ ಸ್ಪಂದಿಸಿ ಸಿಎಂ ಸಿದ್ದರಾಮಯ್ಯ ಅವರು ಎಸ್ಐಟಿ ರಚನೆಗೆ ಆದೇಶ ನೀಡಿದ್ದಾರೆ.
ಈ ಬೆಳವಣಿಗೆಯಿಂದಾಗಿ ಪ್ರಕರಣದ ಸತ್ಯಾಂಶ ಹೊರಬರುವ ನಿರೀಕ್ಷೆ ಹೆಚ್ಚಿದ್ದು, ರಾಜ್ಯದಾದ್ಯಂತ ತೀವ್ರ ಕುತೂಹಲ ಕೆರಳಿಸಿದೆ.








