ಕೋಲ್ಕತ್ತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸವಾಲು ಹಾಕಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 200 ಸ್ಥಾನಗಳನ್ನು ನಿಮಗೆ ಗೆಲ್ಲಲು ಆಗುವುದಿಲ್ಲ ಎಂದು ಸವಾಲು ಹಾಕಿದ್ದಾರೆ. ಮಮತಾ ಬ್ಯಾನರ್ಜಿ ಇಂದು ಕೃಷ್ಣನಗರ ಲೋಕಸಭಾ ಕ್ಷೇತ್ರದಲ್ಲಿ ಸಂಸದೆ ಮಹುವಾ ಮೊಯಿತ್ರಾ ಪರ ಪ್ರಚಾರ ನಡೆಸಿ, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಎನ್ ಡಿಎ ಈ ಬಾರಿ 400 ಪಾರ್ ಎಂದು ಹೇಳುತ್ತಿದ್ದಾರೆ. ನಾನು ಮೊದಲು 200 ಸೀಟುಗಳ ಮಾನದಂಡವನ್ನು ದಾಟಿ ಎಂದು ಸವಾಲು ಹಾಕುತ್ತೇನೆ. 2021 ರ ವಿಧಾನಸಭಾ ಚುನಾವಣೆಯಲ್ಲಿ ಅವರು 200ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದರು. ಆದರೆ, 77ರಲ್ಲಿ ಮಾತ್ರ ಗೆದ್ದರು ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಂದಿಲ್ಲ. ಸಿಎಎಗೆ ಅರ್ಜಿ ಸಲ್ಲಿಸುವುದರಿಂದ ಅರ್ಜಿದಾರರನ್ನು ವಿದೇಶಿಯನ್ನಾಗಿ ಪರಿವರ್ತಿಸುತ್ತದೆ. ಹೀಗಾಗಿ ಯಾರೂ ಅರ್ಜಿ ಸಲ್ಲಿಸಬಾರದು ಎಂದು ಮನವಿ ಹೇಳಿದರು. ಅಲ್ಲದೇ, ಈ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪಶ್ಚಿಮ ಬಂಗಾಳದಲ್ಲಿ INDIA ಒಕ್ಕೂಟ ಇಲ್ಲ. ಸಿಪಿಎಂ ಮತ್ತು ಕಾಂಗ್ರೆಸ್ ಬಿಜೆಪಿ ಜೊತೆ ಕೈಜೋಡಿಸಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.