ಬೆಂಗಳೂರು : ರಾಜ್ಯ ಕಾಂಗ್ರೆಸ್ ನೂತನ ಸಾರಥಿ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಅವರ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಬೆಳಿಗ್ಗೆ 11.30ಕ್ಕೆ ಬರೋಬ್ಬರಿ 10 ಲಕ್ಷ ಮಂದಿ ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಕಟ್ಟಪ್ಪ ಶಿವಕುಮಾರ್ ಕೆಪಿಸಿಸಿಯ 41ನೇ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಈ ಹಿನ್ನೆಲೆ ರಾಜ್ಯದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಸಕಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದ್ದಾರೆ.
ಅದರಂತೆ ಕೋಲಾರ ಜಿಲ್ಲಾ ಕಾಂಗ್ರೆಸ್ ಕೂಡ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೋಲಾರ ತಾಲೂಕಿನ ಚನ್ನಸಂದ್ರ, ನರಸಾಪುರ, ವೇಮಗಲ್ ಸೇರಿದಂತೆ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಜ್ಞಾವಿಧಿ ಕಾರ್ಯಕ್ರಮದ ವೇದಿಕೆ ಸಜ್ಜುಗೊಳಿಸಿದ್ದಾರೆ.
ಇನ್ನು ಪ್ರತಿಜ್ಞಾವಿಧಿ ಕಾರ್ಯಕ್ರಮ ವೀಕ್ಷಣೆಗೆ ರಾಜ್ಯಾದ್ಯಂತ 7,800 ಕಡೆ ವ್ಯವಸ್ಥೆ ನಡೆಸಲಾಗಿದೆ. ಜ್ಯೂಮ್ ಆಪ್ ಮೂಲಕ ನೇರವಾಗಿ ಕಾರ್ಯಕ್ರಮ ವೀಕ್ಷಿಸುವ ಹಾಗೂ ಪ್ರತಿಕ್ರಿಯೆ ವ್ಯಕ್ತಪಡಿಸುವ ತಾಂತ್ರಿಕ ವ್ಯವಸ್ಥೆ ಮಾಡಲಾಗಿದೆ.